ಕೊರೊನಾದಿಂದಾಗಿ ದೇಶವೇ ಲಾಕ್ಡೌನ್ ಆಗಿದೆ. ಹೀಗಿರುವಾಗ ಮಕ್ಕಳ ಜೀವ ಮುಖ್ಯ ಅಂತಾ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಇಂಗ್ಲೀಷ್ ವಿಷಯ ಒಂದು ಬಾಕಿ ಉಳಿದಿದೆ. ಒಂದು ವಿಷಯ ಹೊರತುಪಡಿಸಿ ಉಳಿದ ಎಲ್ಲಾ ವಿಷಯಗಳ ಪರೀಕ್ಷೆಗಳು ನಡೆದಿವೆ. ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಗಳು ಬಾಕಿ ಉಳಿದಿದೆ.
ಇದೀಗ ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದು, ಎಸ್ಎಸ್ಎಲ್ಸಿ ಪರೀಕ್ಷೆ ಯಾವಾಗ ಎಂಬುದು ಕೇವಲ ಪ್ರಶ್ನೆಯಾಗಿಯೇ ಉಳಿದಿತ್ತು. ಲಾಕ್ಡೌನ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮುಖ್ಯವಾಗಿದ್ದು, ಪರೀಕ್ಷೆ ತಡವಾಗಬಹುದು ಎನ್ನಲಾಗಿತ್ತು. ಸದ್ಯ ರಾಜ್ಯದಲ್ಲಿ ಲಾಕ್ಡೌನ್ನಲ್ಲಿ ವಿನಾಯ್ತಿ ನೀಡಲಾಗಿದೆ.
ಹೀಗಾಗಿ ಪರೀಕ್ಷೆ ಕುರಿತು ನಾಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯೊಂದು ನಡೆಸಲಿದ್ದಾರೆ. ಈ ಸಭೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಯಾವಾಗ ಎಂಬುದನ್ನು ಸಚಿವರು ಹೇಳಲಿದ್ದಾರೆ ಎನ್ನಲಾಗುತ್ತಿದೆ. ಬಹುತೇಕ ನಾಳೆ ಈ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂಬ ಮಾತುಗಳು ಕೇಳಿಬಂದಿವೆ.
ಇನ್ನು ಇತ್ತೀಚೆಗೆ ಅಧಿಕಾರಿಗಳೊಂದಿಗೆ ಸಭೆಯೊಂದನ್ನು ಮಾಡಿದ್ದ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಎಸ್ಎಸ್ಎಲ್ಸಿ ಪರೀಕ್ಷೆ ಕುರಿತಂತೆ ಸಿದ್ದತೆ ಮಾಡಿಕೊಳ್ಳಿ ಎಂದಿದ್ದರು. ಹಾಗಾಗಿ ನಾಳೆ ಪರೀಕ್ಷೆ ಸಂಬಂಧ ಮಹತ್ವದ ಸಭೆ ನಡೆಸಲಿದ್ದು, ಆ ಸಭೆಯಲ್ಲಿ ದಿನಾಂಕ ನಿಗದಿಯಾಗಬಹುದು ಎಂಬ ನಿರೀಕ್ಷೆ ಎಲ್ಲರಲ್ಲೂ ಮೂಡಿದೆ.