ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಹೀಗಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಸಾರಿಗೆ ಸಂಚಾರ ಬಂದ್ ಆಗಿದೆ.
ಇದೀಗ ಲಾಕ್ ಡೌನ್ ನಲ್ಲಿ ಕೆಲ ಸಡಿಲಿಕೆ ಮಾಡಿರುವ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾಗಬಹುದೆಂದು ಹೇಳಲಾಗಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಸಿದ್ದತೆಗಳೂ ಕೂಡಾ ನಡೆದಿದ್ದವು.
ಆದರೆ ಮೂಲಗಳ ಪ್ರಕಾರ ಮೇ 31 ರವರೆಗೆ ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲವೆಂದು ಹೇಳಲಾಗಿದೆ. ಕೇಂದ್ರ ಸರ್ಕಾರದದ ಮಾರ್ಗಸೂಚಿ ಅನ್ವಯ ಕೋವಿಡ್-19 ನಿಯಂತ್ರಣ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.
ಸ್ವತಃ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೇ ಬಿಎಂಟಿಸಿ ಬಸ್ ಸಂಚಾರದ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆನ್ನಲಾಗಿದ್ದು, ಕೇಂದ್ರ ಸರ್ಕಾರ ಮೇ 31 ರ ವರೆಗೆ ಲಾಕ್ ಡೌನ್ ಜಾರಿಗೊಳಿಸಿದೆ. ಹೀಗಾಗಿ ಅಲ್ಲಿಯವರೆಗೆ ಬಿಎಂಟಿಸಿ ಸಂಚಾರ ಆರಂಭವಾಗುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.
ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅಂತಿಮವಾಗಿ ಯಾವ ತೀರ್ಮಾನ ಕೈಗೊಳ್ಳುತ್ತಾರೆಂಬುದನ್ನು ಕಾದು ನೋಡಬೇಕಿದೆ. ಒಂದೊಮ್ಮೆ ಬಿಎಂಟಿಸಿ ಬಸ್ ಸಂಚಾರ ಮೇ ಅಂತ್ಯದವರೆಗೆ ಮುಂದೂಡಿಕೆಯಾದರೆ ಲಾಕ್ ಡೌನ್ ಸಡಿಲಿಕೆಯಿಂದ ಈಗಾಗಲೇ ಬಹುತೇಕ ಕಛೇರಿಗಳು, ಉದ್ಯಮಗಳು ತೆರೆದಿರುವ ಕಾರಣ ಕರ್ತವ್ಯಕ್ಕೆ ತೆರಳುವ ಸಾರ್ವಜನಿಕರಿಗೆ ಮತ್ತಷ್ಟು ದಿನಗಳ ಕಾಲ ತೊಂದರೆಯಾಗಲಿದೆ.