
ಜೊತೆಗೆ ವಿವಿಧ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಲಾಗಿತ್ತು. ಸಭೆಯಲ್ಲಿ ಈ ಎಲ್ಲ ಸೂಚನೆಗಳಿಗೆ ಸಮ್ಮತಿಸಿದ್ದ ಕೆಲ ಖಾಸಗಿ ಆಸ್ಪತೆಗಳು ಬಳಿಕ ಯಾವುದನ್ನೂ ಪಾಲಿಸದೆ ಎಲ್ಲವನ್ನೂ ಗಾಳಿಗೆ ತೂರಿದ್ದವು.
ಈ ಕುರಿತು ಮಾಧ್ಯಮಗಳಿಗೆ ನಿರಂತರವಾಗಿ ಸುದ್ದಿ ಪ್ರಕಟಗೊಂಡ ಬಳಿಕ ಇದೀಗ ಸರ್ಕಾರ, ನಿಯಮ ಬಾಹಿರವಾಗಿ ವರ್ತಿಸಿರುವ ಖಾಸಗಿ ಆಸ್ಪತ್ರೆ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಸುಧಾಕರ್, ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.