ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಸೆರೆ ಹಿಡಿಯುತ್ತಿರುವಾಗಲೇ ಲಾರಿಯೊಂದು ಕಾರು ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಪ್ರಕರಣ ಶಿವಮೊಗ್ಗ ತಾಲ್ಲೂಕಿನ ಸಕ್ರೆಬೈಲು ಸಮೀಪ ನಡೆದಿದ್ದು, ಈ ಅಪಘಾತದ ಚಿತ್ರಣವೂ ಮೊಬೈಲ್ನಲ್ಲಿ ಸೆರೆಯಾಗಿದೆ.
ಭಾನುವಾರದಂದು ಈ ಘಟನೆ ನಡೆದಿದ್ದು, ಮಳೆ ಸುರಿಯುತ್ತಿರುವಾಗ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಈ ಯುವತಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಮಾಡುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ಬೈಕಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬೈಕಿನ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೂ ಗುದ್ದಿದೆ.
ಅಪಘಾತದ ಪರಿಣಾಮ ಬೈಕಿನಲ್ಲಿದ್ದ ಜನಾರ್ದನ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕಿನಲ್ಲಿದ್ದ ರಫೀಕ್ ಎಂಬ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಕಾರಿನಲ್ಲಿದ್ದ ಪ್ರತೀಕ್ಷಾ ಎಂಬವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅಪಘಾತದ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ತುಂಗಾನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.