ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿನ್ನೆ ಬೆಳಗಿನ ಜಾವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ರೈ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ನಿನ್ನೆ ಅವರ ಅಂತ್ಯ ಸಂಸ್ಕಾರವನ್ನು ಬಿಡದಿಯಲ್ಲಿ ನೆರವೇರಿಸಲಾಗಿದೆ.
ಅಂತ್ಯ ಸಂಸ್ಕಾರದ ಸಮಯದಲ್ಲಿ ಮುತ್ತಪ್ಪ ರೈ ಗನ್ ಮ್ಯಾನ್ ಗಳು ಗಾಳಿಯಲ್ಲಿ 5 ಸುತ್ತು ಗುಂಡು ಹಾರಿಸಿದ್ದಾರೆ. ಸಾಮಾನ್ಯವಾಗಿ ಅಂತ್ಯಸಂಸ್ಕಾರದ ವೇಳೆ ಗಾಳಿಯಲ್ಲಿ ಗುಂಡು ಹಾರಿಸುವುದು ಸರ್ಕಾರಿ ಗೌರವ ಸಲ್ಲಿಸುವಾಗ ಮಾತ್ರ. ಆದರೆ ಮುತ್ತಪ್ಪ ರೈ ಗನ್ ಮ್ಯಾನ್ ಗಳು ರೈ ಅವರ ಅಂತ್ಯ ಸಂಸ್ಕಾರದ ವೇಳೆ ಈ ಕೆಲಸ ಮಾಡಿದ್ದಾರೆ.
ಹೀಗಾಗಿ ಇವರ ಗನ್ ಮ್ಯಾನ್ ಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದು, ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ಇವರ ಜೊತೆ ರೈ ಸಂಬಂಧಿಯ ಬಂಧನವಾಗಿದೆ. ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.