ಕೇಂದ್ರ ಸರ್ಕಾರ ಮೇ 4 ರಿಂದ ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 17ರ ವರೆಗೆ ಇದು ಮುಂದುವರೆಯಲಿದೆ. ಇದಕ್ಕೂ ಮುನ್ನ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತಲ್ಲದೆ ರಾಜ್ಯ ಸರ್ಕಾರಗಳು ಇದಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತು.
ಅದರಂತೆ ರಾಜ್ಯ ಸರ್ಕಾರ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಬಸ್ ಗಳ ವ್ಯವಸ್ಥೆ ಮಾಡಿದ್ದು, ದುಪ್ಪಟ್ಟು ಪ್ರಯಾಣ ದರ ನಿಗದಿಪಡಿಸಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಾಮಾನ್ಯ ದರ ಪಡೆಯುವಂತೆ ಹೇಳಲಾಗಿತ್ತು.
ಆದರೆ ಲಾಕ್ಡೌನ್ ಕಾರಣದಿಂದಾಗಿ ಕೆಲಸವಿಲ್ಲದೆ ಕಂಗೆಟ್ಟಿರುವ ಕಾರ್ಮಿಕರಿಂದ ಪ್ರಯಾಣ ದರವನ್ನು ವಸೂಲಿ ಮಾಡುತ್ತಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದು, ಕಾರ್ಮಿಕರ ಪ್ರಯಾಣ ದರವನ್ನು ತಾವೇ ಭರಿಸುವುದಾಗಿ ಹೇಳಿದ್ದಲ್ಲದೆ ಒಂದು ಕೋಟಿ ರೂಪಾಯಿ ಚೆಕ್ ನೀಡಲು ಮುಂದಾಗಲಾಗಿತ್ತು.
ಕಾಂಗ್ರೆಸ್ ಪಕ್ಷ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದೆ ಎಂದು ಅರಿವಾಗುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಉಚಿತವಾಗಿ ಕಾರ್ಮಿಕರು ಕೆಎಸ್ಆರ್ಟಿಸಿ ಬಸ್ನಲ್ಲಿ ತಮ್ಮ ಊರಿಗೆ ತೆರಳಬಹುದು ಎಂದು ಘೋಷಿಸಿದ್ದಲ್ಲದೆ ಮೂರು ದಿನಗಳ ಕಾಲ ಇದಕ್ಕೆ ಅವಕಾಶವಿರುತ್ತದೆ ಎಂದು ತಿಳಿಸಿದರು. ಒಟ್ಟಿನಲ್ಲಿ ರಾಜಕೀಯ ಮೇಲಾಟದಿಂದಾಗಿ ಕಾರ್ಮಿಕರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಲಭ್ಯವಾಗಿದ್ದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.