ಭಾನುವಾರದಂದು ಕೇಂದ್ರ ಸರ್ಕಾರ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಮಧ್ಯರಾತ್ರಿಯಿಂದಲೇ ಇದು ಅನುಷ್ಠಾನಕ್ಕೆ ಬಂದಿದೆ. ಲಾಕ್ ಡೌನ್ ಬಳಿಕ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಕುರಿತ ಕೆಲವೊಂದು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ.
ಹೀಗಾಗಿ ಕರ್ನಾಟಕದಲ್ಲಿ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲ ಕಡೆ ಲಾಕ್ ಡೌನ್ ಸಡಿಲಿಕೆ ಮಾಡಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಅಲ್ಲದೆ ಬಿಎಂಟಿಸಿ – ಕೆಎಸ್ಆರ್ಟಿಸಿ ಬಸ್ ಸಂಚಾರ ಕೂಡಾ ಆರಂಭವಾಗಬಹುದೆಂದು ಹೇಳಲಾಗಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.
ಆದರೆ ಬಳಿಕ ರಾಜ್ಯ ಸರ್ಕಾರ ಮೇ 19ರವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳುವ ತೀರ್ಮಾನಕ್ಕೆ ಬಂದಿದ್ದು, ಅಲ್ಲಿಯವರೆಗೆ ಲಾಕ್ ಡೌನ್ ಮುಂದುವರಿಸಿದೆ. ಇದಕ್ಕೆ ಬಹುಮುಖ್ಯ ಕಾರಣವೆಂದರೆ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳು ಎಂದು ಹೇಳಲಾಗಿದೆ. ಹೊರ ರಾಜ್ಯಗಳಿಂದ ಕನ್ನಡಿಗರು ರಾಜ್ಯಕ್ಕೆ ಬಂದ ಬಳಿಕ ಕೊರೊನಾ ಸೋಂಕು ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡುಬರುತ್ತಿದೆ.
ಹೀಗಾಗಿ ಲಾಕ್ ಡೌನ್ ಸಡಿಲಿಕೆ ಮಾಡಿದರೆ ಇದು ಮತ್ತಷ್ಟು ವ್ಯಾಪಿಸಬಹುದು ಎಂಬ ಆತಂಕ ಸರ್ಕಾರವನ್ನು ಕಾಡುತ್ತಿದೆ. ಹೀಗಾಗಿಯೇ ಮೇ 19ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದ್ದು, ಪರಿಸ್ಥಿತಿಯನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.