ದೇಶದಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಗೆ ಈಗಾಗಲೇ 577 ಮಂದಿ ಸಾವನ್ನಪ್ಪಿದ್ದಾರೆ. 18 ಸಾವಿರಕ್ಕೂ ಅಧಿಕ ಸೋಂಕಿತರಿದ್ದು, ಇವರುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಜನಜೀವನ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಬಹುತೇಕ ಎಲ್ಲರೂ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.
ವಿವಿಧ ವರ್ಗಗಳ ಜನತೆಯ ನೆರವಿಗೆ ಧಾವಿಸಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೆರವಿನ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದವು. ಇದೀಗ ರಾಜ್ಯ ಸರ್ಕಾರ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿದೆ.
10,000 ಕಲಾವಿದರಿಗೆ ತಲಾ ಎರಡು ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಲು ಮುಖ್ಯಮಂತ್ರಿ ಯಡಿಯೂರಪ್ಪನವರು ಸಮ್ಮತಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಜೆಟ್ನಲ್ಲಿ ಎರಡು ಕೋಟಿ ರೂಪಾಯಿಗಳನ್ನು ಇದಕ್ಕಾಗಿ ಒದಗಿಸಲಾಗುತ್ತಿದೆ. ಕಲಾವಿದರ ಖಾತೆಗೆ ತಲಾ ಎರಡು ಸಾವಿರ ರೂಪಾಯಿಗಳು ವರ್ಗಾವಣೆಯಾಗಲಿದೆ ಎಂದು ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ ಕಪ್ಪಣ್ಣ ತಿಳಿಸಿದ್ದಾರೆ.