ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ವಿವಾಹ ಸಮಾರಂಭ ನಡೆಸುವ ಸಲುವಾಗಿ ಸಪ್ತಪದಿ ಯೋಜನೆಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ, ಲಾಕ್ ಡೌನ್ ಜಾರಿ ಮಾಡಿದ್ದರಿಂದ ಯೋಜನೆಯನ್ನು ಮುಂದೂಡಿಕೆ ಮಾಡಲಾಗಿತ್ತು.
ಇದೀಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ ಜಾರಿಯಲ್ಲಿದ್ದು, ಆದರೆ ಬಹಳಷ್ಟು ಸಡಿಲಿಕೆಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಕಾರ್ಯಚಟುವಟಿಕೆಗಳು ಆರಂಭವಾಗಿದ್ದು, ಇದರ ಮಧ್ಯೆ ಸಪ್ತಪದಿ ಯೋಜನೆ ಜಾರಿ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಪ್ತಪದಿ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸುವ ಕುರಿತು ಜೂನ್ 15ರೊಳಗೆ ನಿರ್ಣಯ ಕೈಗೊಳ್ಳಲಾಗುವುದು. ಯೋಜನೆಯಡಿ ವಿವಾಹವಾಗಲು ಈಗಾಗಲೇ 4 ಸಾವಿರದಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 1500 ಅರ್ಜಿಗಳನ್ನು ಅರ್ಹವೆಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.