ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ತನ್ನ ಅಟ್ಟಹಾಸ ಮೆರೆಯುತ್ತಿದೆ. ಭಾರತದಲ್ಲೂ ಕರೋನಾ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, 40 ಸಾವಿರ ಮಂದಿ ಸೋಂಕು ಪೀಡಿತರಾಗಿದ್ದಾರೆ.
ಕರೋನಾ ವೈರಸ್ ನಿಯಂತ್ರಿಸಲು ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಮೂರನೇ ಹಂತದ ಲಾಕ್ಡೌನ್ ಮೇ 17ರಂದು ಅಂತ್ಯಗೊಳ್ಳಲಿದೆ. ಲಾಕ್ ಡೌನ್ ನಿಂದಾಗಿ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದು ಆರ್ಥಿಕ ಪರಿಸ್ಥಿತಿಯ ಜೊತೆಗೆ ಶೈಕ್ಷಣಿಕ ವಲಯದ ಮೇಲೂ ಪರಿಣಾಮ ಬೀರಿದೆ.
ಶಾಲಾ – ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ನಿಗದಿಯಾಗಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದರ ಮಧ್ಯೆ ಮೂರನೇ ಹಂತದ ಲಾಕ್ಡೌನ್ ಮುಗಿದ ಬಳಿಕ ಸರ್ಕಾರ ಮತ್ತೊಮ್ಮೆ ಇದನ್ನು ವಿಸ್ತರಿಸುವುದಿಲ್ಲವೆಂಬ ಮಾತುಗಳು ಕೇಳಿಬರುತ್ತಿದ್ದು, ಜೊತೆಗೆ ಕೆಲವೊಂದು ನಿರ್ಬಂಧಗಳನ್ನು ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುತ್ತದೆ ಎನ್ನಲಾಗುತ್ತಿದೆ.
ಆದರೆ ಕರೋನಾ ಮಾರಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವವರೆಗೆ ಅಥವಾ ಇದಕ್ಕೆ ಲಸಿಕೆ ಕಂಡು ಹಿಡಿಯುವವರೆಗೆ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜುಗಳನ್ನು ಆರಂಭಿಸಬಾರದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಶಾಲಾ – ಕಾಲೇಜು ಆರಂಭಿಸಲು ಸರ್ಕಾರ ಸೂಚನೆ ನೀಡಿದರೂ ಇದು ಸೂಕ್ತವಲ್ಲ ಎಂದು ಹೇಳಲಾಗುತ್ತಿದೆ.