ತುಮಕೂರು: ರಾಜ್ಯ ಸರ್ಕಾರ, ಫಸಲ್ ಭೀಮಾ ಯೋಜನೆ ಅಡಿ ರೈತರಿಗೆ ಹಣ ಬಿಡುಗಡೆ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾ ವಹಿಸಲು ತುಮಕೂರು ಜಿಲ್ಲಾ ಕೇಂದ್ರದಲ್ಲಿ ಸಭೆ ನಡೆಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಪಾಲಿನ ಹಣ 18. 59 ಕೋಟಿ ರೂ. ಬಿಡುಗಡೆ ಮಾಡಿದೆ. ಇದರಿಂದ 1,13,876 ಮಂದಿ ರೈತ ಫಲಾನುಭವಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ. ರಾಜ್ಯದಲ್ಲಿ ಅತೀಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್ – ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು.
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರ, ಕೀಟನಾಶಕ ಪೂರೈಸಲು ಕ್ರಮಕೈಗೊಳ್ಳಲಾಗಿದೆ. ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.