ಚಿತ್ರದುರ್ಗ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇದರಲ್ಲಿ ಸಾಲ ಕೊಡುವ ಬದಲು ದೇಶದ ಎಲ್ಲ ಬಡವರ ಖಾತೆಗೆ 10 ಸಾವಿರ ರೂ. ಪಾವತಿಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನಿಂದ ಯಾವುದೇ ಪ್ರಯೋಜನವಿಲ್ಲ. ಎರಡು ಲಕ್ಷ ಕೋಟಿ ರೂಪಾಯಿ ಲೆಕ್ಕ ಕೊಟ್ಟು ಕೇಂದ್ರ ಸರ್ಕಾರ ಅಂಗೈನಲ್ಲೇ ಅರಮನೆಯನ್ನು ತೋರಿಸಿದೆ ಎಂದು ಟೀಕಿಸಿದ್ದಾರೆ.
ತೆರಿಗೆ ವ್ಯಾಪ್ತಿಗೆ ಒಳಪಡದ ಎಲ್ಲರಿಗೂ ಪರಿಹಾರ ಕೊಡಬೇಕೆಂದು ಮೇ 28 ರಂದು ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಮಾಡಿದ ಕಾರಣ ವಿಫಲವಾಗಿದೆ. ಶ್ರಮಿಕ ವರ್ಗ ಸಂಕಷ್ಟಕ್ಕೆ ಸಿಲುಕಿದ್ದು ಕೊರೊನಾ ಸೋಂಕು ಹರಡುವುದು ಹೆಚ್ಚಾಗಿದೆ ಎಂದು ದೂರಿದ್ದಾರೆ. ವಲಸೆ ಕಾರ್ಮಿಕರ ಸಾವಿಗೆ ಮತ್ತು ಅವರ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣವಾಗಿದೆ. ರೈತರಿಗೆ, ಕಾರ್ಮಿಕರಿಗೆ ನೇರವಾಗಿ ಹಣ ಸಿಕ್ಕರೆ ಅನುಕೂಲವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.