ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದೆ. ಶನಿವಾರದಂದು ಊರಿಗೆ ತೆರಳಲು ಮುಂದಾದ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ದುಪ್ಪಟ್ಟು ಪ್ರಯಾಣ ದರ ವಸೂಲಿ ಮುಂದಾಗಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ.
ಶನಿವಾರ, ಸರ್ಕಾರ ವಲಸೆ ಕಾರ್ಮಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡಲು ಮುಂದಾದ ಸಂದರ್ಭದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಳಿಕ ಅವರಿಂದ ಮಾಮೂಲಿ ದರ ಪಡೆಯಲು ತೀರ್ಮಾನಿಸಲಾಗಿತ್ತು. ಇದೀಗ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಕುರಿತು ಇಂದು ಆದೇಶ ಹೊರಡಿಸಿದ್ದು, ರಾಜ್ಯದ ವಿವಿಧ ಭಾಗಗಳಿಗೆ ತೆರಳಲು ಮುಂದಾಗುವ ವಲಸೆ ಕಾರ್ಮಿಕರಿಗೆ ಮೂರು ದಿನಗಳ ಕಾಲ ಉಚಿತ ಪ್ರಯಾಣದ ಸೌಲಭ್ಯ ಲಭ್ಯವಾಗಲಿದೆ.
ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಕಂಗೆಟ್ಟಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ಊರಿಗೆ ತೆರಳಲೂ ದುಪ್ಪಟ್ಟು ಪ್ರಯಾಣ ದರ ನೀಡುವ ಸಂದರ್ಭ ಎದುರಾದಾಗ ಕಂಗೆಟ್ಟು ಹೋಗಿದ್ದರು. ಈಗ ಉಚಿತ ಪ್ರಯಾಣಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿರುವುದರಿಂದ ಸಂತಸಗೊಂಡಿದ್ದಾರೆ.