ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನೀವು ಗಮನಹರಿಸಿ, ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅಭಯ ನೀಡಿದ್ದಾರೆ.
ರಾಜ್ಯದಲ್ಲಿ ಕೆಲವು ಬಿಜೆಪಿ ಶಾಸಕರು ಪ್ರತ್ಯೇಕ ಸಭೆ ನಡೆಸಿದ ಬಗ್ಗೆ ಮಾಹಿತಿ ಪಡೆದುಕೊಂಡ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜ್ಯವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದೀರಿ. ಕೊರೋನಾ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ನಿಮ್ಮ ಕೆಲಸವನ್ನು ಮುಂದುವರಿಸುವಂತೆ ತಿಳಿಸಿದ್ದಾರೆ. ನೀವು ಕೊರೋನಾ ನಿಯಂತ್ರಿಸಲು ಗಮನಹರಿಸಿ, ಉಳಿದ ವಿಚಾರವನ್ನು ನಮಗೆ ಬಿಡಿ ಎಂದು ಅಮಿತ್ ಶಾ, ಯಡಿಯೂರಪ್ಪನವರಿಗೆ ಧೈರ್ಯ ಹೇಳಿದ್ದಾರೆ.
ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ ಅವರು, ಕೊರೋನಾ ಸಂಬಂಧ ಪರಿಣಾಮಕಾರಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ನಮ್ಮ ಗಮನಕ್ಕೆ ಇದೆ. ನೀವು ನಿಮ್ಮ ಪಾಡಿಗೆ ಕೆಲಸ ಮಾಡಿ ಉಳಿದ ವಿಚಾರವನ್ನು ನಮಗೆ ಬಿಡಿ ಎಂದು ಸಿಎಂಗೆ ಹೇಳಿದ್ದಾರೆ ಎನ್ನಲಾಗಿದೆ.