ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಗೊಳಿಸಿದ್ದ ಸರ್ಕಾರ ರೈತರ ಅನುಕೂಲಕ್ಕಾಗಿ ಮತ್ತಷ್ಟು ಕ್ರಮಕೈಗೊಂಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಕೊರೋನಾ ಸೋಂಕು ಕಾಣಿಸಿಕೊಳ್ಳದ ಪ್ರದೇಶಗಳಲ್ಲಿ ಲಾಕ್ಡೌನ್ ನಿಯಮಗಳನ್ನು ಸಡಿಲಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.
ರೈತರು ಬೆಳೆದ ತರಕಾರಿ ಹಣ್ಣುಗಳನ್ನು ಸರ್ಕಾರದಿಂದಲೇ ಖರೀದಿಸಿ ಶೈತ್ಯಾಗಾರದಲ್ಲಿ ಇಟ್ಟು ಬಳಿಕ ಮಾರಾಟಕ್ಕೆ ಅವಕಾಶ ನೀಡಬೇಕು. ಹಾಳಾಗುವ ಹಣ್ಣು ತರಕಾರಿಗಳನ್ನು ಬೇರೆ ರಾಜ್ಯ ಮತ್ತು ವಿದೇಶಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.
ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮತ್ತು ಬೆಳೆ ಬೆಳೆಯಲು ಬಿಡಬೇಕು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆಗಾಲ ಆರಂಭದಲ್ಲಿ ಅಣೆಕಟ್ಟಿನಲ್ಲಿ ನೀರಿನ ಒಳಹರಿವು ಮತ್ತು ಸಂಗ್ರಹದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದರೊಂದಿಗೆ ಸರಕು ಸಾಗಾಣಿಕೆಗೆ ಕೆಎಸ್ಆರ್ಟಿಸಿ ಬಸ್ ಗಳನ್ನು ಬಳಸಿಕೊಂಡು ಆದಾಯ ಸಂಗ್ರಹಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ.