ರಾಜ್ಯಸಭೆ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ. ಸಹೋದರ ರಮೇಶ್ ಕತ್ತಿ ಪರವಾಗಿ ಮಾಜಿ ಸಚಿವ ಉಮೇಶ್ ಕತ್ತಿ ಬ್ಯಾಟಿಂಗ್ ನಡೆಸಿದ್ದು, ಕೊಟ್ಟ ಭರವಸೆಯನ್ನು ಈಡೇರಿಸಬೇಕೆಂದು ಪಟ್ಟು ಹಿಡಿದಿದ್ದು ಇದರಿಂದಾಗಿ ಸಿಎಂ ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೊದಲು ಲೋಕಸಭೆ ಟಿಕೆಟ್ ಅಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ಸಾಗಿತ್ತು. ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನವೂ ಕೈತಪ್ಪಿತು. ಆಗ ಯಡಿಯೂರಪ್ಪ ನೀಡಲಾಗಿದ್ದ ಭರವಸೆಯಂತೆ ರಮೇಶ್ ಕತ್ತಿಯವರಿಗೆ ರಾಜ್ಯಸಭೆ ಟಿಕೆಟ್ ಕೊಡಬೇಕು ಮತ್ತು ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಇಡಲಾಗಿದೆ.
ಆಡಳಿತ ಪಕ್ಷದ ಅನೇಕ ಶಾಸಕರು ಭೋಜನಕೂಟದ ನೆಪದಲ್ಲಿ ಸಭೆ ಸೇರಿ ಚರ್ಚೆ ನಡೆಸಿರುವುದು ಬಿಎಸ್ವೈ ಪಾಳೆಯದಲ್ಲಿ ತೀವ್ರ ತಳಮಳ ಸೃಷ್ಟಿಸಿದೆ ಎನ್ನಲಾಗಿದೆ. ರಾಜ್ಯಸಭೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರನ್ನು ಈ ಹಿಂದೆ ಭೇಟಿ ಮಾಡಿದ್ದ ಉಮೇಶ್ ಕತ್ತಿ, ಸಹೋದರ ರಮೇಶ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.
ಚರ್ಚೆಯ ವೇಳೆ ನಿಮ್ಮನ್ನು ಸಚಿವರನ್ನಾಗಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದು ನನ್ನನ್ನು ಮಂತ್ರಿ ಮಾಡುವುದು ಇರಲಿ, ಮೊದಲು ಸಹೋದರನಿಗೆ ರಾಜ್ಯಸಭೆ ಟಿಕೆಟ್ ಕೊಡಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ. ನಾನು ಹಿಂದೆಯೇ ಸಚಿವನಾಗಬೇಕಿತ್ತು. ಸಚಿವನಾಗಲು ನಾನು ಅರ್ಹನಿದ್ದೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಟಿಕೆಟ್ ಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಇದ್ದು, ಬಿಜೆಪಿಯೊಳಗೆ ಗೊಂದಲ ಶುರುವಾಗಿದೆ. ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಸಿಎಂ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.