ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದ್ದರೂ ಪ್ರಾಧ್ಯಾಪಕರು ಕಡ್ಡಾಯವಾಗಿ ಕಾಲೇಜುಗಳಿಗೆ ಬರಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಜೆ ಇದ್ದರೂ ಪ್ರಾಧ್ಯಾಪಕರು ಕಾಲೇಜುಗಳಿಗೆ ಕಡ್ಡಾಯವಾಗಿ ಆಗಮಿಸಿ ಪರೀಕ್ಷಾ ಸಿದ್ಧತೆ ಸಹಿತ ಮೊದಲಾದ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಹೇಳಲಾಗಿದೆ. ಕೆಂಪು ವಲಯದಲ್ಲಿ ಎ ಮತ್ತು ಬಿ ಗುಂಪಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಸಿ ಮತ್ತು ಡಿ ವರ್ಗದ ಶೇಕಡ 33ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗಲು ತಿಳಿಸಲಾಗಿದೆ.
ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ಕಾಲೇಜು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಆದರೆ ಕೆಂಪು ವಲಯದಲ್ಲಿ ಕಾಲೇಜುಗಳಿಗೆ ಕೆಲಸಕ್ಕೆ ಹೋಗುವುದಾದರೂ ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಿಲ್ಲ. ಇಂತಹ ಸಂದರ್ಭದಲ್ಲಿ ಕೆಂಪು ವಲಯದಲ್ಲಿಯೂ ಹಾಜರಾತಿ ಕಡ್ಡಾಯ ಗೊಳಿಸುವ ಅಗತ್ಯವಿತ್ತೆ ಎಂದು ಕಾಲೇಜು ಅಧ್ಯಾಪಕರ ಸಂಘದ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.