ಬೆಂಗಳೂರು: ವೃತ್ತಿನಿರತ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂಪಾಯಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್, ಜಿ. ಪರಮೇಶ್ವರ್, ಆರ್.ವಿ. ದೇಶಪಾಂಡೆ, ಡಿ.ಕೆ. ಸುರೇಶ್, ಅಜಯ್ ಸಿಂಗ್, ವಿ.ಎಸ್. ಉಗ್ರಪ್ಪ, ಸಲೀಂ ಅಹಮ್ಮದ್ ಸೇರಿದಂತೆ ಹಲವು ನಾಯಕರು ನಿಯೋಗದಲ್ಲಿದ್ದರು.
ಅಸಂಘಟಿತ ಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕು. ಸಂಕಷ್ಟದಲ್ಲಿರುವವರಿಗೆ, ವಲಸೆ ಕಾರ್ಮಿಕರಿಗೆ ನೆರವಾಗಬೇಕು. ಕೋರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸೌಲಭ್ಯ ಕಲ್ಪಿಸಬೇಕು. ಕೋರೋನಾ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ ಆರ್ಥಿಕ ನೆರವು ನೀಡುವಂತೆ ಕೇಂದ್ರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಲಾಗಿದೆ.
ಸೋಂಕು ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ಜನರ ಸಂಕಷ್ಟಕ್ಕೆ ಎಲ್ಲ ರೀತಿಯ ಆರ್ಥಿಕ ಮತ್ತು ಇನ್ನಿತರ ಸಹಾಯ ನೀಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಸಲಹೆ ನೀಡಲಾಗಿದೆ. ಭೇಟಿಯ ವೇಳೆ ಸಿಎಂ ಜೊತೆಗೆ ಮಾತನಾಡಿದ ಕಾಂಗ್ರೆಸ್ ನಾಯಕರು ಹಲವು ಸಲಹೆ ನೀಡಿದ್ದಾರೆ ಸರ್ಕಾರ ಕೈಗೊಳ್ಳುವ ಕಾರ್ಯಕ್ಕೆ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.