ಬೆಂಗಳೂರು: ಗರ್ಭಿಣಿಯರು, ಬಾಣಂತಿಯರು, ಮಕ್ಕಳಿಗೆ ಸರ್ಕಾರದ ವತಿಯಿಂದ ನೀಡಲಾಗುವ ಆಹಾರ ಪದಾರ್ಥಗಳ ಪ್ಯಾಕೆಟ್ ಮೇಲೆ ಬಿಜೆಪಿ ನಾಯಕರ ಲೇಬಲ್ ಹಾಕಿ ವಿತರಣೆ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸರ್ಕಾರದ ಆಹಾರ ಸಾಮಗ್ರಿಗಳಿಗೆ ಅಕ್ರಮವಾಗಿ ತಮ್ಮ ಹೆಸರನ್ನು ಹಾಕಿಸಿಕೊಂಡು ಹಂಚಿಕೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾನೂನು ಪ್ರಕಾರ ಇದು ಅಪರಾಧವಾಗಿದ್ದು, ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ಇಂತಹ ಆಹಾರದ ಪ್ಯಾಕೆಟ್ ಹಂಚುತ್ತಿರುವ ಬಗ್ಗೆ ಸಂಸದ ಡಿ.ಕೆ. ಸುರೇಶ್ ಮತ್ತು ವಿ.ಎಸ್. ಉಗ್ರಪ್ಪ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಅನೇಕ ಕಡೆ ಅಕ್ರಮ ನಡೆಯುತ್ತಿದೆ. ಈ ಬಗ್ಗೆ ತನಿಖೆ ನಡೆಸಬೇಕು. ಬಡಮಕ್ಕಳು, ಬಾಣಂತಿಯರು, ಗರ್ಭಿಣಿಯರ ಬಗ್ಗೆ ಕಾಳಜಿ ಇದ್ದರೆ ಸರ್ಕಾರದ ಹೆಸರಿನಲ್ಲಿಯೇ ಹಂಚಬಹುದು. ಅದನ್ನು ಬಿಟ್ಟು ಬಿಜೆಪಿ ನಾಯಕರ ಹೆಸರು ಹಾಕಿಸಿ ಹಂಚುವುದು ಸರಿಯೇ ಎಂದು ಸಂಸದ ಡಿ.ಕೆ. ಸುರೇಶ್ ಪ್ರಶ್ನಿಸಿದ್ದಾರೆ.