ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆಯಲ್ಲಿ ಕೊರೋನಾಗೆ ತುತ್ತಾಗಿ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.
ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಪರಿಹಾರವನ್ನು ಸಾರಿಗೆ ಇಲಾಖೆಯಿಂದ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಮೇ 19 ರಿಂದ ಸಾರಿಗೆ ಸಂಸ್ಥೆಗಳ ಬಸ್ ಗಳು ಕಾರ್ಯ ನಿರ್ವಹಿಸಲಿದ್ದು ಈ ಸಂದರ್ಭದಲ್ಲಿ ಚಾಲಕರು, ನಿರ್ವಾಹಕರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗಿದೆ.
ಸಾರಿಗೆ ಸಂಸ್ಥೆಗಳ ಎಲ್ಲಾ ಚಾಲಕರು, ನಿರ್ವಾಹಕರು ಮತ್ತು ಸಿಬ್ಬಂದಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕು. ಪ್ರಯಾಣಿಕರು ಬಸ್ ಗಳಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮೊದಲಾದ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ತಿಳಿಸಿದ್ದಾರೆ.