ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ ನೌಕರರು ಮೇ 19 ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದು, ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ-ಮಂಡಳಿಗಳಲ್ಲಿ ಶೇಕಡ 100 ರಷ್ಟು ಸಿಬ್ಬಂದಿ ಹಾಜರಾತಿ ಇರಬೇಕು ಎಂದು ತಿಳಿಸಿದ್ದಾರೆ.
ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕರ್ತವ್ಯಕ್ಕೆ ಹಾಜರಾಗಬೇಕು. ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇಲಾಖೆಗಳ ಸಿಬ್ಬಂದಿ ಶೇಕಡ 33ರಷ್ಟು ಹಾಜರಾತಿಯೊಂದಿಗೆ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿತ್ತು. ಈಗಾಗಲೇ ಲಾಕ್ ಡೌನ್ ನಿಯಮ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.