ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಬಂಡಿಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ತೆಪ್ಪ ಮುಳುಗಿ ಇಬ್ಬರು ಅರಣ್ಯ ಇಲಾಖೆಯ ಸಿಬ್ಬಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಹತ್ಯೆ ಪ್ರಕರಣದ ಹಿಂದೆ ಕೆಲವು ಅನುಮಾನಗಳಿದ್ದು, ಅರಣ್ಯ ಇಲಾಖೆ ಮತ್ತು ಪೊಲೀಸರಿಂದ ಜಂಟಿ ತನಿಖೆ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿದ್ದ ದುಷ್ಕರ್ಮಿಗಳು ಸಿಬ್ಬಂದಿಯನ್ನು ಮುಳುಗಿಸಿ ಕೊಲೆ ಮಾಡಿದ್ದಾರೆಯೇ ಅಥವಾ ಇವರೇ ಮುಳುಗಿದರೆ ಎಂಬ ಬಗ್ಗೆ ಅನುಮಾನಗಳಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಮತ್ತು ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಲಿದ್ದು, ತಕ್ಷಣಕ್ಕೆ ಇಲಾಖೆಯಿಂದ 1 ಲಕ್ಷ ರೂ. ಸಚಿವರ ವೈಯಕ್ತಿಕ ನೆರವು ಒಂದು ಲಕ್ಷ ರೂಪಾಯಿ ನೀಡಲಾಗಿದೆ.