ದೃಷ್ಟಿ ದೋಷವುಳ್ಳ ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ವಿತರಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಜನವರಿ 20ರ ಬಳಿಕ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ನಡೆಯಲಿದ್ದು, ಬಳಿಕ ಅಗತ್ಯವಿದ್ದವರಿಗೆ ಕನ್ನಡಕ ವಿತರಿಸಲಾಗುತ್ತದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ‘ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ದೋಷ ನಿಯಂತ್ರಣ’ ಕಾರ್ಯಕ್ರಮದಡಿಯಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಯಲಿದ್ದು, ಆ ಬಳಿಕ ದೃಷ್ಟಿದೋಷವಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುತ್ತದೆ.
ಪ್ರಸ್ತುತ ಕೊರೊನಾ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ನಡೆಯುತ್ತಿದ್ದು, ಜೊತೆಗೆ ವಿದ್ಯಾಗಮ ಕಾರ್ಯಕ್ರಮ ಸಹ ನಡೆಯುತ್ತಿದೆ. ಹೀಗಾಗಿ ಈ ವಿದ್ಯಾರ್ಥಿಗಳಿಗೆ ಮೊದಲು ನೇತ್ರ ತಪಾಸಣೆ ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ನಲ್ಲಿ ಮುಳಗಿರುವ ಕಾರಣ ದೃಷ್ಟಿದೋಷ ಕಾಣಿಸಿಕೊಳ್ಳುತ್ತಿದ್ದು, ಇದನ್ನು ಪೋಷಕರಿಗೆ ಹೇಳಲಾಗದೆ ತೊಳಲಾಡುತ್ತಾರೆ. ಇದು ಕಲಿಕೆಯ ಮೇಲೂ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ನೇತ್ರ ತಪಾಸಣೆ ನಡೆಸಿ ಉಚಿತ ಕನ್ನಡಕ ವಿತರಿಸಲು ಮುಂದಾಗಿದೆ.