ಬೆಂಗಳೂರು: ಸ್ಥಳೀಯ ಸುದ್ದಿವಾಹಿನಿ ನಿರೂಪಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ.
ಖಾಸಗಿ ಕಂಪನಿಯೊಂದರಲ್ಲಿ ಚಾಲಕನಾಗಿದ್ದ ಮೈಸೂರಿನ ಪ್ರವೀಣ್ ಬಂಧಿತ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ನಿರೂಪಕಿಯಾಗಿರುವ 24 ವರ್ಷದ ಯುವತಿ ಕೆಂಗೇರಿ ಠಾಣೆಗೆ ದೂರು ನೀಡಿದ್ದು, ದೂರನ್ನು ಆಧರಿಸಿ ಪೊಲೀಸರು ಪ್ರವೀಣ್ ನನ್ನು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಠಾಣಾ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ.
ಈತ ಬೇರೆ ಬೇರೆ ಸಿಮ್ ಬಳಸಿಕೊಂಡು ನಿರೂಪಕಿಗೆ ಅಶ್ಲೀಲ ಸಂದೇಶ ಕಳುಹಿಸಿರುವುದು ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದೆ. ಯುವತಿ ಮೊದಲು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಅವರು ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದಾರೆ. ಯುವತಿಗೆ ಕರೆ ಮಾಡುತ್ತಿದ್ದ ಪ್ರವೀಣ್ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ. ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಈತನ ಕಾಟದಿಂದ ರೋಸಿ ಹೋದ ಯುವತಿ ಮೈಸೂರಿನ ಉದಯಗಿರಿ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಕರೆಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು. ಈತ ಮತ್ತೆ ತನ್ನ ಚಾಳಿಯನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದರು ಎಂದು ಹೇಳಲಾಗಿದೆ.