ರಾಯಚೂರು: ಖಾಸಗಿ ಬಸ್ ಪ್ರಯಾಣ ದರವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್ ಗಳ ಸಂಚಾರ ಕೂಡ ಆರಂಭವಾಗಲಿದೆ.
ಶೇಕಡ 15 ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಖಾಸಗಿ ಬಸ್ ಮಾಲೀಕರು ಶೇಕಡ 50ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಮನವಿ ಮಾಡಿದ್ದು ಶೇಕಡ 15 ರಷ್ಟು ಹೆಚ್ಚಳಕ್ಕೆ ಸಮ್ಮತಿ ಸೂಚಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿ ಬಸ್ ನಲ್ಲಿ 30 ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅನುಮತಿ ನೀಡಲು ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ.
ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ಯುವುದರಿಂದ ನಷ್ಟವಾಗುತ್ತದೆ ಎಂದು ಬಸ್ ಮಾಲೀಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಶೇಕಡ 15 ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರಿ ಬಸ್ ಗಳಲ್ಲಿ ಅನುಸರಿಸಲಾಗುವ ನಿಯಮಗಳನ್ನು ಖಾಸಗಿ ಬಸ್ ಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕೆಂಪು ವಲಯ ಮತ್ತು ಬಫರ್ ಜೋನ್ ಗಳಿಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗದಂತೆ ಖಾಸಗಿ ಬಸ್ ಮಾಲೀಕರಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸೇವಾಮನೋಭಾವದ ಉದ್ದೇಶದಿಂದ ಸರ್ಕಾರಿ ಬಸ್ ಸಂಚಾರ ಆರಂಭಿಸಲಾಗಿದೆ. ಇಲಾಖೆಗೆ ನಷ್ಟವಾದರೂ ಪ್ರಯಾಣಿಕರಿಗೆ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.