ಲಾಕ್ಡೌನ್ ಜಾರಿಯಲ್ಲಿದ್ದರೂ ಬಸ್ ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ನಿಗದಿತ ಸಂಖ್ಯೆಯ ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಸೇರಿ ಹಲವು ನಿಯಮಗಳನ್ನು ಪಾಲಿಸುವ ಮೂಲಕ ಈಗಾಗಲೇ ರಾಜ್ಯದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಮೊದಲೇ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ಬಸ್ ಸಂಚಾರ ಆರಂಭಿಸಲಾಗಿತ್ತು. ಕಳೆದ ವಾರದಿಂದ ರಾಜ್ಯದಲ್ಲಿ ಬಸ್ ಸಂಚಾರ ಹಂತ ಹಂತವಾಗಿ ಆರಂಭವಾಗುತ್ತಿದೆ. ಇನ್ನು ಮುಂದೆ ರಾತ್ರಿ ವೇಳೆಯಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆಯಿಂದ ಸಂಜೆಯವರೆಗೆ ಬಸ್ ಸಂಚಾರಕ್ಕೆ ಅವಕಾಶ ಇದ್ದು, ಇನ್ನು ಮುಂದೆ ರಾತ್ರಿ ಪ್ರಯಾಣಕ್ಕೆ ಅವಕಾಶ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯತೆಗೆ ಅನುಗುಣವಾಗಿ ರಾತ್ರಿಯೂ ಬಸ್ ಸಂಚಾರ ಆರಂಭಿಸಲಾಗುವುದು. ಕೊರೊನಾ ಸೋಂಕು ತಡೆಯಲು ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ಬಸ್ ಸಂಚಾರ ಸ್ಥಗಿತಗೊಂಡು ಇಲಾಖೆಗೆ ನಷ್ಟವಾಗಿದೆ. ಹೀಗಿದ್ದರೂ ಸಿಬ್ಬಂದಿಗೆ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ. ಸದ್ಯಕ್ಕೆ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.