ಬೆಂಗಳೂರು: ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿಸುದ್ದಿ ಇಲ್ಲಿದೆ. ನಾಳೆಯಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು ಇಂದು ಸಂಜೆ ವೇಳೆಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ.
ಆರಂಭದಲ್ಲಿ 2000 ಬಸ್ ಗಳನ್ನು ರಸ್ತೆಗಿಳಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಮಾಹಿತಿ ಕಡ್ಡಾಯವಾಗಿ ಸಂಗ್ರಹಿಸಲಾಗುವುದು. ಪ್ರಯಾಣಿಕರ ಊರು, ವಿಳಾಸ, ಮೊಬೈಲ್ ನಂಬರ್ ಸಂಗ್ರಹಿಸಲು ಯೋಜಿಸಲಾಗಿದೆ. ಟಿಕೆಟ್ ನೀಡುವಾಗಲೇ ಕಂಡಕ್ಟರ್ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಿದ್ದಾರೆ. ಕೊರೋನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಿದರೆ ಪತ್ತೆಗೆ ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಪ್ರಯಾಣಿಕರ ಮಾಹಿತಿಯನ್ನು ಪಡೆಯಲಾಗುವುದು.
ಲಾಕ್ಡೌನ್ 4 ಹೊಸ ನಿಯಮಗಳೊಂದಿಗೆ ಜಾರಿಗೆ ಬಂದಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಭೆ ನಡೆಸಿ ಬಸ್ ಸಂಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಎಸಿ ಬಸ್ ಗಳ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು. ಕೊರೋನಾ ಸೋಂಕು ಹರಡುವುದನ್ನು ತಡೆಯಲು ಎಸಿ ಬಸ್ ಗಳಿಗೆ ಬ್ರೇಕ್ ಹಾಕಲಾಗಿದೆ. ನಾನ್ ಎಸಿ ಬಸ್ ಗಳ ಸಂಚಾರಕ್ಕೆ ಮಾತ್ರ ತೀರ್ಮಾನಿಸಲಾಗಿದೆ ಎನ್ನಲಾಗಿದೆ.