ಬೆಂಗಳೂರು: ಲಾಕ್ಡೌನ್ ಜಾರಿಯಾದ ಬಳಿಕ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು ಹೆಚ್ಚು ಕಡಿಮೆ ಒಂದೂವರೆ ತಿಂಗಳಿನಿಂದ ಕಾಯುತ್ತಿರುವ ಮದ್ಯ ಪ್ರಿಯರಿಗೆ ನಾಳೆ ಸಿಹಿ ಸುದ್ದಿ ಸಿಗುತ್ತೆ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಮೇ 3 ರ ವರೆಗೂ ಲಾಕ್ ಡೌನ್ ಮುಂದುವರೆಯಲಿದ್ದು, ಕೊರೋನಾ ಸೋಂಕು ಇಲ್ಲದ ಜಿಲ್ಲೆಗಳಿಗೆ ಲಾಕ್ ಡೌನ್ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಬಕಾರಿ ಸಚಿವ ಹೆಚ್. ನಾಗೇಶ್ ಸೇರಿದಂತೆ ಹಲವರು ಸಲಹೆ ನೀಡಿದ್ದಾರೆ.
ಆರ್ಥಿಕತೆ ಉದ್ದೇಶದಿಂದಲೂ ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದ್ದು, ಆದಾಯ ಸಂಗ್ರಹಕ್ಕಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂದು ಹೇಳಲಾಗಿದೆ. ಆದರೆ, ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಮೇ 3 ರವರೆಗೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲವೆಂದು ಹೇಳಿದ್ದಾರೆ. ಈ ನಡುವೆ ಭಾರಿ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.