ಮಂಡ್ಯ: ‘ರಾಜಕಾರಣದಲ್ಲಿ ಯಾವುದೇ ಡೆಡ್ ಲೈನ್ ಹಾಕಿಕೊಂಡು ಕೆಲಸ ಮಾಡಲು ಆಗುವುದಿಲ್ಲ. ರಾಜಕಾರಣ ನಿರಂತರ ಕಲಿಕಾ ಕ್ಷೇತ್ರವಾಗಿದ್ದು ನಾನು ಅದೇ ದಾರಿಯಲ್ಲಿ ಸಾಗುತ್ತಿದ್ದೇನೆ.’
ಹೀಗೆಂದು ಹೇಳಿದ್ದು ಸಂಸದೆ ಸುಮಲತಾ ಅಂಬರೀಶ್. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಂಬರೀಶ್ ಹುಟ್ಟುಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ವಿತರಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಸದಸ್ಯೆಯಾದ ಒಂದು ವರ್ಷದ ಅವಧಿಯಲ್ಲಿ ಸಂಸದರ ನಿಧಿ ಬಳಕೆಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇದು ಕಾರ್ಯವೈಖರಿಯನ್ನು ತಿಳಿಸುತ್ತದೆ ಎಂದು ಹೇಳಿದ್ದಾರೆ.
ಸಂಸದರ ನಿಧಿಯನ್ನು ಸದ್ಬಳಕೆ ಮಾಡಲಾಗಿದೆ. ಒಂದು ವರ್ಷದಲ್ಲೇ ಎಲ್ಲಾ ಸಮಸ್ಯೆಗೂ ಪರಿಹಾರ ಒದಗಿಸಲು ಆಗುವುದಿಲ್ಲ. ಹಂತಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.