ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಭಾರಿ ಮಳೆಗೆ ಭೂಕುಸಿತವಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿಯು ಒಂದೆರಡು ಅಡಿಗಳಷ್ಟು ನೀರು ಹರಿದಿದೆ. ಕೆಲವಡೆ ಕಾಂಪೌಂಡ್ ಕುಸಿದು ಮರಗಳು ನೆಲಕ್ಕುರುಳಿವೆ. ವಾಹನಗಳು ಜಖಂಗೊಂಡಿವೆ.
ಮೈಸೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಭಾರಿ ಮಳೆಯಿಂದ ಕೆರೆ ಕೋಡಿ ಹರಿದು ನೂರಾರು ಪ್ರದೇಶದಲ್ಲಿನ ಬೆಳೆಹಾನಿಯಾಗಿದೆ. ಮನೆಗಳಿಗೆ ನೀರು ನುಗ್ಗಿ ಗೋಡೆ ಕುಸಿದು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೊಡಗಿನ ಗೋಣಿಕೊಪ್ಪ ಸಮೀಪದಲ್ಲಿ ಭಾರಿ ಗಾಳಿ ಮಳೆಗೆ ಬಾಳೆಗಿಡ ನೆಲಕ್ಕುರುಳಿವೆ. ಇದೇ ರೀತಿ ಮಳೆ ಅವಾಂತರ ಸೃಷ್ಟಿಸಿದ್ದು ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.