ಬೆಂಗಳೂರು: ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆಗೆ ಮರ, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ
ಮೂಡಿಗೆರೆ ತಾಲೂಕಿನ ಹಲವೆಡೆ ಭಾರಿ ಮಳೆಯಾದ ಕಾರಣ ರಸ್ತೆ ಮೇಲೆ ಭಾರಿ ಪ್ರಮಾಣದ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿದೆ. ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಿದೆ. ಚನ್ನಪಟ್ಟಣ ತಾಲ್ಲೂಕಿನ ಸೀಬನಹಳ್ಳೀಯಲ್ಲಿ ರೇಷ್ಮೆ ಗೂಡು ನಾಶವಾಗಿವೆ. ರೇಷ್ಮೆ ಸಾಕಾಣಿಕೆ ಕೇಂದ್ರಗಳ ಛಾವಣಿ ಹಾರಿಹೋಗಿವೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಐದು ಮೇಕೆ ಮೃತಪಟ್ಟಿವೆ. ಶಿರಾಳಕೊಪ್ಪದಲ್ಲಿ 60 ಮನೆಗಳಿಗೆ ಹಾನಿಯಾಗಿದೆ. ಅದೇ ರೀತಿ ಹಲವು ಕಡೆ ಭಾರೀ ಗಾಳಿಯಿಂದ ವಿದ್ಯುತ್ ಕಂಬಗಳು ಮರಗಳು ಬಿದ್ದು ಮನೆಗಳಿಗೆ ಹಾನಿಯಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೃಷಿಭೂಮಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.
ಶಿವಮೊಗ್ಗ, ಭದ್ರಾವತಿ ವ್ಯಾಪ್ತಿಯಲ್ಲಿಯೂ ಭಾರಿ ಮಳೆಯಾಗಿದೆ. ಸೋಮವಾರ ಬೆಳಗ್ಗೆಯಿಂದಲೂ ಮಳೆಗಾಳಿ ಅಬ್ಬರ ಜೋರಾಗಿದ್ದು ಗುಡುಗು ಸಹಿತ ಮಳೆಯಾಗುತ್ತಿದೆ. ಮಂಡ್ಯ, ಮೈಸೂರು, ಚಾಮರಾಜನಗರ ವ್ಯಾಪ್ತಿಯಲ್ಲಿಯೂ ಭಾರಿ ಮಳೆಯಾಗಿದೆ.
ಅಂಫಾನ್ ಚಂಡಮಾರುತದ ಪ್ರಭಾವ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರದಿದ್ದರೂ ಅರಬ್ಬಿ ಸಮುದ್ರದಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂತೆಯೇ ಭಾರೀ ಮಳೆ ಮುಂದುವರೆದಿದೆ.
ಮೇ 19 ರವರೆಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಹಾಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.