ಪೊಲೀಸ್ ಅಧಿಕಾರಿ ಅಲೋಕ್ ಮೋಹನ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನನ್ನ ಮೇಲೆ ಅವರಿಗೆ ದ್ವೇಷ ಇದ್ದರೆ ತೀರಿಸಿಕೊಳ್ಳಲಿ. ಆದರೆ ಇಂತಹ ನಿರ್ಧಾರಗಳಿಂದ ಜನರಲ್ಲಿ ಆತಂಕ ಮೂಡಿಸಬಾರದು ಎಂದು ತಾಕೀತು ಮಾಡಿದ್ದಾರೆ. ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇಲ್ಲಿದ್ದ ಕೈದಿಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಪಾದರಾಯನಪುರ ಗಲಾಟೆಯಲ್ಲಿ ಭಾಗಿಯಾದ ಇಬ್ಬರು ಆರೋಪಿಗಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ರಾಮನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಾದರಾಯನಪುರದಲ್ಲಿ ಬಂಧಿತರಾದವರನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಹೇಳಿದ್ದೆ. ಆದರೂ ಪೊಲೀಸ್ ಅಧಿಕಾರಿ ಅಲೋಕ್ ಮೋಹನ್ ಸ್ಥಳಾಂತರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇದರಿಂದಾಗಿ ರಾಮನಗರದ ಜೈಲ್ ನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಮನೆ ಖಾಲಿ ಮಾಡುವಂತೆ ಮನೆಯ ಮಾಲೀಕರು ಒತ್ತಡ ಹೇರುತ್ತಿದ್ದಾರೆ. ಇದೊಂದು ಬೆಳವಣಿಗೆಯಿಂದ ರಾಮನಗರದಲ್ಲಿ ಹಲವು ಸಮಸ್ಯೆಗಳು ಸೃಷ್ಟಿಯಾಗಲಿವೆ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನನ್ನ ಅಧಿಕಾರದ ಅವಧಿಯಲ್ಲಿ ಅಲೋಕ್ ಮೋಹನ್ ಪೊಲೀಸ್ ಆಯುಕ್ತರನ್ನಾಗಿ ಮಾಡಲು ಮನವಿ ಮಾಡಿದ್ದರು. ಇದಕ್ಕೆ ನಾನು ಒಪ್ಪದ ಹಿನ್ನೆಲೆಯಲ್ಲಿ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜೈಲಿಗೆ ಸ್ಥಳಾಂತರ ಮಾಡಬಾರದು ಎಂದು ಹೇಳಿದ್ದೆ. ರಾಮನಗರದಲ್ಲಿ 20 ಜನರನ್ನು ಒಂದೇ ಕಡೆ ಕೂಡಿ ಹಾಕಿದ್ದಾರೆ. ಇನ್ನೂ ಏನೇನೋ ಆಗುತ್ತೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ. ನಿನ್ನೆ ಇಬ್ಬರನ್ನು ಸ್ಥಳಾಂತರಿಸಲಾಗಿದೆ. ಅವರ ಜೊತೆಗೆ ಐವರು ಪೊಲೀಸರು ಕೂಡ ಇದ್ದರು. ಅವರು ಯಾವುದೇ ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ. ಪೊಲೀಸರಿಗೆ ಏನು ಸಮಸ್ಯೆಯಾಗಿದೆಯೋ ಗೊತ್ತಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರಕ್ಕೆ ನಾನು ಬೆಂಬಲ ನೀಡುತ್ತಲೇ ಬಂದಿದ್ದೇನೆ. ಮಂಡ್ಯದಲ್ಲಿ ಆಶಾ ಕಾರ್ಯಕರ್ತೆಗೆ ಹಿಂಸೆ ನೀಡಿದ್ದಾರೆ. ಆಕೆ ಆತ್ಮಹತ್ಯೆಗೆ ಯತ್ನಿಸಿ ಬದುಕಿದ್ದಾರೆ. ಕೆಲವರು ಮಾಡುವ ತಪ್ಪಿನಿಂದಾಗಿ ಹೀಗೆಲ್ಲ ಆಗುತ್ತಿದೆ. ರಾಮನಗರ ಜೈಲಿನ ಪರಿಸ್ಥಿತಿ ಏನಾಗಿದೆ ಗೊತ್ತಾಗುತ್ತಿಲ್ಲ. ಜೈಲಿನಲ್ಲಿದ್ದ ಎಲ್ಲರನ್ನೂ ಕ್ವಾರಂಟೈನ್ ಮಾಡಬೇಕಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಆರೋಪಿಗಳನ್ನು ಸ್ಥಳಾಂತರ ಮಾಡಬೇಕು. ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ರಾಜ್ಯ ಸರ್ಕಾರ ಈಗಾಗಲೇ ಎಡವಿದ್ದು ಎಚ್ಚೆತ್ತುಕೊಳ್ಳಬೇಕು. ಗೃಹ ಸಚಿವರೊಂದಿಗೆ ಮಾತನಾಡಿದ್ದು ಅವರು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.