ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಎರಡು ತಿಂಗಳ ಪಡಿತರ ವಿತರಿಸಲಾಗಿದೆ.
ಈಗಾಗಲೇ ಪಡಿತರ ವಿತರಣೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಮೇ ಮೊದಲ ವಾರದಲ್ಲಿ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿರುವ ಪಡಿತರ ಅಕ್ಕಿ ಮತ್ತು ತೊಗರಿ ಬೇಳೆ ವಿತರಣೆ ಆರಂಭಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇ ಮೊದಲ ವಾರದಿಂದ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ಪಡಿತರ ಅಕ್ಕಿ ಮತ್ತು ತೊಗರಿ ಬೇಳೆ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತದಿಂದ ವಿವಿಧ ಸೇವೆಗಳಿಗೆ ಈಗಾಗಲೇ ನೀಡಿರುವ ಪಾಸ್ ದುರುಪಯೋಗ ಪಡಿಸಿರುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳು ಕಡ್ಡಾಯ ಮಾಹಿತಿ ಒದಗಿಸಬೇಕು: ಜಿಲ್ಲೆಯ ಪ್ರತಿಯೊಂದು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳಲ್ಲಿ ಜ್ವರ, ಉಸಿರಾಟ ತೊಂದರೆ, ಗಂಟಲು ನೋವು ಇತ್ಯಾದಿ ರೋಗಗಳ ಚಿಕಿತ್ಸೆಗಾಗಿ ಬರುವವರ ಮಾಹಿತಿಯನ್ನು ಪ್ರತಿ ದಿನ ಗೂಗಲ್ ಸ್ಟ್ರೆಡ್ ಶೀಟ್ನಲ್ಲಿ ಒದಗಿಸುವಂತೆ ಈಗಾಗಲೆ ಸೂಚನೆ ನೀಡಲಾಗಿದೆ. ಈ ಕುರಿತು ಪರಿಶೀಲಿಸಲು ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಪ್ರತಿ ದಿನ ತಪಾಸಣೆ ನಡೆಸಲಾಗುತ್ತಿದೆ. ಮಾಹಿತಿಯನ್ನು ಒದಗಿಸದಿರುವ ಪ್ರಕರಣಗಳಲ್ಲಿ ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಆರೋಗ್ಯ ತಪಾಸಣೆ: ಜಿಲ್ಲೆಯಾದ್ಯಂತ ಇದುವರೆಗೆ 13ಲಕ್ಷಕ್ಕೂ ಹೆಚ್ಚು ಜನರ ಆರೋಗ್ಯ ಸಮೀಕ್ಷೆ ನಡೆಸಲಾಗಿದೆ. ಗರ್ಭಿಣಿಯರು, ಡಯಾಬಿಟಿಸ್, ಶುಗರ್, ಹೆಚ್ಐವಿ ಪೀಡಿತರು, 60ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆಯನ್ನು ಪ್ರತಿ ಮೂರು ದಿನಗಳಿಗೊಮ್ಮೆ ನಡೆಸುವಂತೆ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.