ಬೆಂಗಳೂರು: ಮನೆ ನಿರ್ಮಾಣಕ್ಕೆ ಅಗತ್ಯವಾಗಿ ಬೇಕಾದ ಮರಳು ಸಿಗದೇ ಭಾರಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ನೂತನ ಮರಳು ನೀತಿ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನೂತನ ಮರಳು ನೀತಿಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮತ್ತು ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಸಂಪುಟ ಸಮಿತಿ ರಚಿಸಿ ವಿವಿಧ ರಾಜ್ಯಗಳಲ್ಲಿ ಇರುವ ಮರಳು ನೀತಿ ಬಗ್ಗೆ ಅಧ್ಯಯನ ನಡೆಸಲಾಗಿದೆ.
ಗ್ರಾಮ ಪಂಚಾಯಿತಿ ಇಲ್ಲವೇ ಸರ್ಕಾರದ ಸಂಸ್ಥೆಯೊಂದರ ಮೂಲಕ ಮರಳು ಮಾರಾಟ ಮಾಡಲು ಅವಕಾಶ ನೀಡಲು ಶಿಫಾರಸು ಮಾಡಲಾಗಿತ್ತು. ಈಗ ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಸಾರ್ವಜನಿಕರಿಗೆ ಸುಲಭವಾಗಿ ಮರಳು ದೊರಕಿಸಿಕೊಡಲು ನೂತನ ಮರಳು ನೀತಿ ಜಾರಿಗೆ ತರಲಾಗುವುದು. ಇಂದಿನ ಸಂಪುಟ ಸಭೆಯಲ್ಲಿ ನೂತನ ಮರಳು ನೀತಿಗೆ ಒಪ್ಪಿಗೆ ಸಿಗಬಹುದು ಎಂದು ಹೇಳಲಾಗಿದೆ.