ಬೆಂಗಳೂರು: ಲಾಕ್ ಡೌನ್ ನಿಂದಾಗಿ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆ ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶೈಕ್ಷಣಿಕ ವರ್ಷದಲ್ಲಿ ಕಳೆದುಕೊಳ್ಳುವ ಅವಧಿಯ ಆಧಾರದ ಮೇಲೆ ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿಯಲ್ಲಿ ಅನವಶ್ಯಕ ಪುನರಾವರ್ತಿತವಾದ ಪಠ್ಯವನ್ನು ಕೈಬಿಡಬೇಕು. ಅತ್ಯಾವಶ್ಯಕವಾದ ಪಠ್ಯವನ್ನು ಉಳಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ಕೂಡಲೇ ಸಿದ್ಧಪಡಿಸಬೇಕೆಂದು ಸೂಚಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಕಡಿತವಾಗಬಹುದಾದ ಅವಧಿಯ ಆಧಾರದಲ್ಲಿ ಪ್ರತಿ ತರಗತಿ ಹಾಗೂ ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ 15 ದಿನಗಳ, 1 ತಿಂಗಳ, ಒಂದುವರೆ ತಿಂಗಳ, 2 ತಿಂಗಳ ಹಂತವಾರು ಹೆಚ್ಚುವರಿಯಾಗಬಹುದಾದ ಪಠ್ಯಗಳನ್ನುಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತ್ರತ ವರದಿ ತಯಾರಿಸಬೇಕೆಂದು ತಿಳಿಸಿದ್ದಾರೆ.
ಇದೇ ಶೈಕ್ಷಣಿಕ ಸಾಲಿನಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಹೊಂದಾಣಿಕೆಗಳ ಬಗ್ಗೆ ಪಠ್ಯವನ್ನು ಎಲ್ಲ ತರಗತಿಗಳಿಗೆ ಬೋಧಿಸುವಲ್ಲಿ ಕೂಡಲೇ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸೂಚಿಸಿದ್ದಾರೆ.
ಕೊರೋನಾ ಕುರಿತಂತೆ ಆಯಾ ವಯೋಮಾನದ ವಿದ್ಯಾರ್ಥಿಗಳಿಗೆ ಆಕರ್ಷಣೀಯವಾಗುವ ರೀತಿಯಲ್ಲಿ ಕಿರುಪಠ್ಯ ರಚನೆ ಮಾಡಿ ಶಾಲೆಗಳಿಗೆ ಪೂರೈಸುವುದರ ಜೊತೆಗೆ ಶಿಕ್ಷಕರ ತರಬೇತಿ ಪಠ್ಯಕ್ರಮದಲ್ಲಿಯೂ ಅಳವಡಿಸಿಕೊಳ್ಳಬೇಕು. ಪಠ್ಯಕ್ರಮದ ಒಂದು ಭಾಗವಾಗಿ ಕಡ್ಡಾಯವಾಗಿ ಕಲಿಯಬೇಕಾದ ವಿಷಯವಾಗಿರುವಂತೆ ಅನುಷ್ಠಾನಗೊಳಿಸಬೇಕೆಂದು ಹೇಳಿದ್ದಾರೆ.