ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಬಿಎಂಟಿಸಿಯ ವಿವಿಧ ಹುದ್ದೆಗಳಿಗೆ ಜುಲೈ 13, 14 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಧಾರವಾಡ, ಕಲಬುರಗಿ, ಬೆಂಗಳೂರು, ಬಳ್ಳಾರಿಯ 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಪ್ರತಿ ಕೊಠಡಿಯಲ್ಲಿಯೂ ಕ್ಯಾಮರಾ ಅಳವಡಿಸಲಾಗಿದೆ. ಅಕ್ರಮಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೊಠಡಿಯ ಬೆಳವಣಿಗೆ ಗಮನಿಸಲು ಟಿವಿ ಹಾಗೂ ಮೇಲ್ವಿಚಾರಣೆಗೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು, ಭಾವಚಿತ್ರ ಪಡೆದು ಅವರು ಅರ್ಜಿ ಸಲ್ಲಿಸುವಾಗ ಲಗತ್ತಿಸಿದ ಭಾವಚಿತ್ರದ ಜೊತೆಗೆ ಹೊಂದಾಣಿಕೆ ಮಾಡುವ ವ್ಯವಸ್ಥೆ ಕೂಡ ಮಾಡಲಾಗಿದೆ. ಇದರಿಂದ ಯಾರದೋ ಹೆಸರಿನಲ್ಲಿ ಮತ್ಯಾರೋ ಅಭ್ಯರ್ಥಿ ಪರೀಕ್ಷೆ ಬರೆಯುವುದನ್ನು ತಡೆಯಬಹುದಾಗಿದೆ.
ಕಲಬುರಗಿ, ಧಾರವಾಡ, ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಉಪ ಕಮಾಂಡಿಂಗ್ ಸೆಂಟರ್ ತೆರೆಯಲಾಗಿದ್ದು, ಅಲ್ಲಿಯೂ ಮೇಲ್ವಿಚಾರಣೆ ನಡೆಸಲಾಗುವುದು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.