ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಲಾಗಿದೆ.
ಆಗಸ್ಟ್ 7 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು. ಗದಗದ ಮುನ್ಸಿಪಲ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗಿದೆ.
ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮಿತ್ ಕುಮಾರ್ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ. ಪತ್ರಕರ್ತರ ಸೋಗಿನಲ್ಲಿ ಸಮಿತ್ ಕುಮಾರ್ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ. ಮೊಬೈಲ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ರವಾನೆ ಮಾಡಿದ್ದ ಎನ್ನಲಾಗಿದ್ದು, ತಂದೆ, ಮಗನನ್ನು ಬೆಳಗಾವಿ ಸೈಬರ್ ಕ್ರೈಂ ಠಾಣೆ ಪೊಲೀಸರು. ಬಂಧಿಸಿದ್ದಾರೆ.
ಗದಗ ಮುನ್ಸಿಪಲ್ ಕಾಲೇಜ್ ಪ್ರಾಂಶುಪಾಲ ಕುಲಕರ್ಣಿ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರು ವಿಚಾರಣೆ ವೇಳೆ ಕಣ್ಣೀರಿಟ್ಟಿದ್ದಾರೆ. ಆಗಸ್ಟ್ 7 ರಂದು ಗದಗ -ಬೆಟಗೇರಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಬೆಳಗಾವಿ ಪೊಲೀಸರು ಶೋಧ ನಡೆಸಿ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.