alex Certify BREAKING NEWS: ದುಷ್ಕರ್ಮಿಗಳ ಹಲ್ಲೆಯಿಂದ ಕರ್ತವ್ಯನಿರತ ಚಾಲಕ ಸಾವು, ಲಕ್ಷ್ಮಣ ಸವದಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದುಷ್ಕರ್ಮಿಗಳ ಹಲ್ಲೆಯಿಂದ ಕರ್ತವ್ಯನಿರತ ಚಾಲಕ ಸಾವು, ಲಕ್ಷ್ಮಣ ಸವದಿ ಆಕ್ರೋಶ

ಸಾರ್ವಜನಿಕರ ಹಿತದೃಷ್ಟಿಯಿಂದ ಇಂದು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಶ್ರೀ ಅವಟಿ ಎಂಬುವರು ಜಮಖಂಡಿ ಸಮೀಪ ಕರ್ತವ್ಯಕ್ಕೆ ಹಾಜರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ ತೀವ್ರ ಹಿಂಸಾಕೃತ್ಯ ಎಸಗಿದ ಪರಿಣಾಮ ಅವರು ಮೃತಪಟ್ಟಿರುವುದು ತೀವ್ರ ದುಃಖದಾಯಕ. ಅವರ ಆತ್ಮಕ್ಕೆ ನಾನು ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ಸಾಂತ್ವಾನ ಹೇಳುತ್ತೇನೆ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಶಾಂತಿಯುತವಾಗಿ ಮುಷ್ಕರ ನಡೆಸುತ್ತೇವೆ ಎಂದು ಮುಷ್ಕರ ನಿರತರು ಹೇಳುತ್ತಲೇ ತಮ್ಮ ಸಹೋದ್ಯೋಗಿಯ ಜೀವವನ್ನೇ ಬಲಿ ತೆಗೆದುಕೊಂಡಿರುವುದು ತೀವ್ರ ಖಂಡನೀಯವಾಗಿದೆ. ತಾವು ಕೆಲಸ ಮಾಡುವುದಿಲ್ಲ, ಇತರೆ ನಿಷ್ಠಾವಂತರಿಗೆ ಕೆಲಸ ಮಾಡಲು ಬಿಡುವುದಿಲ್ಲ ಎಂಬ ಪ್ರತಿಭಟನಾಕಾರರ ಧೋರಣೆ ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಈ ರೀತಿ ಹಿಂಸಾಕೃತ್ಯ ನಡೆಸುವವರನ್ನು ಸರ್ಕಾರ ಎಂದಿಗೂ ಕ್ಷಮಿಸುವುದಿಲ್ಲ. ಈ ರೀತಿ ದುಷ್ಕೃತ್ಯ ನಡೆಸಿದರೆ ಕರ್ತವ್ಯಕ್ಕೆ ಹಾಜರಾಗುವ ನೌಕರರನ್ನು ವಿಚಲಿತಗೊಳಿಸಬಹುದು ಎಂದು ಕೆಲವರು ಹವಣಿಸಿದ್ದಾರೆ. ಅದು ಯಶಸ್ವಿಯಾಗುವುದಿಲ್ಲ. ಏಕೆಂದರೆ ಈಗಾಗಲೇ ಮುಷ್ಕರ ನಿರತರ ಹಠಮಾರಿ ಧೋರಣೆ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಇಂದು 5300 ಕ್ಕೂ ಅಧಿಕ ಬಸ್ ಗಳು ಸಂಚಾರ ಮಾಡಿವೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಕಳೆದ 10 ದಿನಗಳಲ್ಲಿ ಸಾರ್ವಜನಿಕರು ಪೂರ್ಣಪ್ರಮಾಣದಲ್ಲಿ ಸರ್ಕಾರಿ ಬಸ್ ಸೇವೆ ಸಿಗದೆ ಪರಿತಪಿಸುವಂತಾಗಿರುವುದು ದುರ್ದೈವದ ಸಂಗತಿಯಾಗಿದೆ. ಕರ್ತವ್ಯನಿರತ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆ ನೀತಿ ಸಂಹಿತೆ ಅವಧಿ ಮುಗಿದ ನಂತರ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ದುಷ್ಕರ್ಮಿಗಳ ಕಲ್ಲು ತೂರಾಟ, ಹಿಂಸಾಚಾರದಿಂದ ಇದುವರೆಗೆ 80 ಬಸ್ ಗಳು ಜಖಂಗೊಂಡಿದ್ದು, ಸಾರಿಗೆ ನಿಗಮಗಳಿಗೆ ಮತ್ತಷ್ಟು ನಷ್ಟವಾಗಿದೆ. ಮುಷ್ಕರದಿಂದ 187 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ನಷ್ಟವಾಗಿದೆ. ಇಂತಹ ಬೆಳವಣಿಗೆ ಸಾರಿಗೆ ನಿಗಮಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಹಿಂಸಾಚಾರಗಳಿಂದ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಮುಷ್ಕರ ನಿರತರು ಅರಿತುಕೊಳ್ಳಬೇಕು. ಅಹಿತಕರ ಘಟನೆಯಂತಹ ಕೃತ್ಯಗಳಿಗೆ ಮುಂದಾದರೆ ತಕ್ಕಶಾಸ್ತಿ ಅನುಭವಿಸಬೇಕಾಗುತ್ತದೆ. ಸಾರಿಗೆ ನೌಕರ ನೌಕರರು ಸ್ವಯಂ ಪ್ರೇರಿತರಾಗಿ ಕೆಲಸಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ತಡೆಯುವ, ಬೆದರಿಸುವ, ಹಲ್ಲೆ ನಡೆಸುವ ಪ್ರಯತ್ನಗಳು ಹಲವುಕಡೆ ನಡೆದಿದ್ದು ಇಂತಹ ದುಂಡಾವರ್ತನೆ ನಡೆಸುವವರು ಯಾರೇ ಆಗಿರಲಿ, ಅಂಥವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಬಗ್ಗೆ ನಟ ಯಶ್ ಅವರು ಸೇರಿದಂತೆ ಕೆಲವರು ನನ್ನೊಂದಿಗೆ ಚರ್ಚಿಸಿದ್ದು, ಅವರ ಬೇಡಿಕೆಗಳ ಬಗ್ಗೆ ನನಗೂ ಸಹಾನುಭೂತಿಯಿದೆ. ಆದರೆ ಒಂದೇ ಕೈಯಿಂದ ಚಪ್ಪಾಳೆ ಸಾಧ್ಯವಿಲ್ಲ. ನೌಕರರು ಮುಷ್ಕರ ಸ್ಥಗಿತಗೊಳಿಸಿದರೆ ಮತ್ತೆ ಮಾತುಕತೆ ನಡೆಸಲಾಗುವುದು. ಎಲ್ಲರೂ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...