ಬಳ್ಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಧ್ವನಿ ವರ್ಧಕಗಳು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಗೀತ ವಾದ್ಯಗಳ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಲೌಡ್ ಸ್ಪೀಕರ್ಗಳು, ಧ್ವನಿ ವರ್ಧಕಗಳನ್ನು ಬಳಸಲು ಆಯಾ ವ್ಯಾಪ್ತಿಯ ನಿಗದಿಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಯಾವುದೇ ಪರವಾನಗಿ ಇಲ್ಲದೇ ಧ್ವನಿವರ್ಧಕಗಳನ್ನು ಬಳಸಿದಲ್ಲಿ ಅಂತಹ ವಾಹನ ಮತ್ತು ಉಪಕರಣಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಪರವಾನಿಗೆ ಇಲ್ಲದೇ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ಸ್ವಯಂಪ್ರೇರಣೆಯಿಂದ ಹಿಂಪಡೆಯಬೇಕು. ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 06 ಗಂಟೆಯೊಳಗಿನ ಅವಧಿಯಲ್ಲಿ ಬಳಸುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.
ಯಾವುದೇ ಧ್ವನಿವರ್ಧಕ ಬಳಸುವ ವಾಹನ ಮತ್ತು ಯಾವುದೇ ಪ್ರದೇಶದಲ್ಲಿ ಪಟಾಕಿ ಸಿಡಿಸುವ ಉದ್ದೇಶವಿದ್ದಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಸ್ಥಳೀಯ, ಆಯಾ ವ್ಯಾಪ್ತಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಪರವಾನಿಗೆಯನ್ನು ಪ್ರದರ್ಶಿಸಬೇಕಾಗುತ್ತದೆ.
ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ವಾಹನಗಳು, ಸರಕು ವಾಹನಗಳು, ಆಟೋಗಳು ಧ್ವನಿವರ್ಧಕಗಳನ್ನು ಬಳಸುವಾಗ ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.
ಪರವಾನಿಗೆ ಪಡೆಯುವ ವೇಳೆ ಸಂಬಂಧಿಸಿದವರ ಗುರುತಿನ ಪತ್ರ ಮತ್ತು ವಾಹನಗಳ ದಾಖಲೆಗಳ ಪತ್ರಗಳನ್ನು ಸಲ್ಲಿಸಬೇಕು ಮತ್ತು ಎಲ್ಲಾ ವಿಧವಾದ ಧ್ವನಿ ವರ್ಧಕಗಳ ಬಳಕೆಯ ಅವಧಿಯು ಮತದಾನ ಮುಕ್ತಾಯಕ್ಕೆ 48 ಗಂಟೆಗಳ ಮೊದಲು ಕೊನೆಗೊಳ್ಳಲಿದೆ.
ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಆದೇಶವು ಇಡೀ ಬಳ್ಳಾರಿ ಜಿಲ್ಲೆಯಾದ್ಯಂತ ಅನ್ವಯಿಸಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.