ಬೆಂಗಳೂರು : ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವನ್ನಪ್ಪಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕೋಟಿ ಪರಿಹಾರಕ್ಕೆ ಪತಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಮೆಟ್ರೋ ಪಿಲ್ಲರ್ ಬಿದ್ದು ತಾಯಿ-ಮಗು ಸಾವನ್ನಪ್ಪಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ ಲೋಹಿತ್ ಕುಮಾರ್ ವಿ ಸುಲಾಖೆ ತಕರಾರು ಅರ್ಜಿ ಸಲ್ಲಿಸಿದ್ದರು. ಬಿಎಂಆರ್ಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ದೂರಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ತುರ್ತು ನೋಟಿಸ್ ನೀಡಿದೆ. ಪ್ರತಿವಾದಿಗಳಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದ ನಂತರ ನ್ಯಾಯಾಲಯವು ಪ್ರಕರಣವನ್ನು ಮುಂದೂಡಿದೆ. ಪತ್ನಿ ಮತ್ತು ಪುತ್ರನ ಸಾವಿಗೆ ಪರಿಹಾರವಾಗಿ 20 ಲಕ್ಷ ರು. ನೀಡುವುದಾಗಿ ಹೇಳಿದ್ದರು. ಮೆಟ್ರೋ ನೀಡಿರುವ ಪರಿಹಾರವನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ .10 ಕೋಟಿ ಪರಿಹಾರ ನೀಡಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ.
ಮೆಟ್ರೋ ಪಿಲ್ಲರ್ ಕಾಮಗಾರಿ ವೇಳೆ ಕಂಬಿ ಕುಸಿದು ಬಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಎರಡುವರೆ ವರ್ಷದ ಮಗು ಸಾವನ್ನಪ್ಪಿದ್ದರು. ಬಿ ಎಂ ಆರ್ ಸಿ ಎಲ್ ಹಾಗೂ ಮೆಟ್ರೋ ಕಾಮಗಾರಿ ನಡೆಸುತ್ತಿರುವ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಗಳು ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದ್ದಿತ್ತು. ಪತಿ, ಪತ್ನಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಲ್ಟಿಯಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹಾಗೂ ಮಗು ಸಾವನ್ನಪ್ಪಿದ್ದರು. 28 ವರ್ಷದ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದರು. ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರು.