ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆಗೆ ಪ್ರಧಾನಿ ಮೋದಿಯೂ ಲೆಕ್ಕಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ 5 ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕಾಗಿ ಹಿಂದುತ್ವ ಅಪಾಯದಲ್ಲಿದೆ ಎಂಬ ಹುಸಿಭೀತಿಯನ್ನು ಜನರಲ್ಲಿ ಹುಟ್ಟಿಸಿ ಕೋಮುಭಾವನೆಯನ್ನು ಕೆರಳಿಸಿ ಮತಗಳ ಧ್ರುವೀಕರಣಗೊಳಿಸುವುದು ಅವರ ಉದ್ದೇಶವಾಗಿದೆ. ಹೆಗಡೆ ಅವರಿಗೆ ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿ ಪಕ್ಷವನ್ನೇ ಯಾಕೆ ಪ್ರಧಾನಿ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ ಎಂದು ಕಿಡಿಕಾರಿದರು.
ಅನಂತ ಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ ಪಕ್ಷದ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ. “ಹೆಗಡೆ ಹೇಳಿರುವುದನ್ನೇ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್ ಎಂದರು.