
ಬೆಂಗಳೂರು: ರಾಜ್ಯದಲ್ಲಿ ಅನೇಕ ರಾಜಕೀಯ ವಿದ್ಯಮಾನಗಳ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ದೌಡಾಯಿಸಿದ್ದಾರೆ.
ದಿಢೀರ್ ಬೆಳವಣಿಗೆಯಲ್ಲಿ ಬಳ್ಳಾರಿ ಮತ್ತು ಕಲಬುರಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅವರು ನಿನ್ನೆ ಚಿತ್ರದುರ್ಗದಲ್ಲಿ ಇದ್ದಾಗಲೇ ವರಿಷ್ಠರಿಂದ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ಹೊರಟಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಿರಾಣಿ ಸಂಬಂಧ ಉತ್ತಮವಾಗಿದೆ. ತಕ್ಷಣವೇ ಬರುವಂತೆ ವರಿಷ್ಠರ ಸೂಚನೆ ಹಿನ್ನಲೆಯಲ್ಲಿ ನಿರಾಣಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಹಲವು ವಿದ್ಯಮಾನಗಳು ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ನಿರಾಣಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಬೆಳಗ್ಗೆ 11 ಗಂಟೆಗೆ ನಿರಾಣಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯದ ರಾಜಕೀಯ ವಿಚಾರ, ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗುವ ರಾಜ್ಯದ ಸಂಸದರ ಬಗ್ಗೆ ಅಮಿತ್ ಶಾ ಹಾಗೂ ಬಿಜೆಪಿ ವರಿಷ್ಠರು ನಿರಾಣಿ ಅವರಿಂದ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.