ಮೈಸೂರು : ಮೈಸೂರು ಜಂಬೂಸವಾರಿಗೆ ಇದೀಗ ಚಾಲನೆ ಸಿಕ್ಕಿದ್ದು, ಚಿನ್ನದ ಅಂಬಾರಿ ಹೊತ್ತು ಆನೆ ಅಭಿಮನ್ಯು ಗತ್ತಿನಲ್ಲಿ ಸಾಗಿದೆ.
ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಕುಳಿತ ನಾಡ ದೇವತೆ ಚಾಮುಂಡಿ ಎಲ್ಲರನ್ನೂ ಹರಸಿದಳು. ಚಾಮುಂಡಿ ತಾಯಿಯನ್ನು ಹೊತ್ತ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ಲಕ್ಷಾಂತರ ಮಂದಿ ಜನರು ಈ ದೃಶ್ಯವನ್ನು ಕಣ್ತುಂಬಿಕೊಂಡರು.
ದಸರಾ ಜಂಬೂ ಸವಾರಿ ಮೆರವಣಿಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಿಎಂ ಸಿದ್ದರಾಮಯ್ಯಗೆ ಸಾಥ್ ನೀಡಿದರು. ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವ ವೇಳೆ 21 ಕುಶಾಲತೋಪು ಸಿಡಿಸಲಾಯಿತು.
ಜಂಬೂ ಸವಾರಿ ಮೆರವಣಿಗೆಗೂ ಮುನ್ನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಮಧ್ಯಾಹ್ನ 1;46ರಿಂದ 2:48ರವರೆಗಿನ ಶುಭ ಮಕರ ಲಗ್ನದಲ್ಲಿ ನಂದಿದ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.