ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಸಾಮೂಹಿಕ ಹೋರಾಟಕ್ಕಾಗಿ ಈಗಾಗ್ಲೇ ಬಿಹಾರದ ಪಾಟ್ನಾದಲ್ಲಿ ಮೊದಲ ಸುತ್ತಿನ ಸಭೆ ನಡೆಸಿದ್ದ ವಿಪಕ್ಷಗಳು ಮುಂದಿನ ಸಭೆಯನ್ನು ಶಿಮ್ಲಾದಲ್ಲಿ ನಡೆಸುವುದಾಗಿ ಘೋಷಿಸಿದ್ದವು.
ಆದರೆ ಈಗ ಸ್ಥಳ ಬದಲಾವಣೆಯಾಗಿದ್ದು ವಿರೋಧ ಪಕ್ಷಗಳ ನಾಯಕರ ಮುಂದಿನ ಸಭೆ ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ತಿಳಿಸಿದ್ದಾರೆ.
“ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆಯ ನಂತರ ಪಿಎಂ ಮೋದಿ ಚಿಂತಿತರಾಗಿದ್ದಾರೆ” ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಜೂನ್ 23 ರಂದು ಬಿಹಾರ ರಾಜಧಾನಿ ಪಾಟ್ನಾದಲ್ಲಿ 15 ವಿರೋಧ ಪಕ್ಷಗಳ ನಾಯಕರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸಾಮೂಹಿಕ ಹೋರಾಟ ನಡೆಸಲು ಸಭೆ ನಡೆಸಿದ್ದರು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದ ವಿರೋಧ ಪಕ್ಷದ ನಾಯಕರು ಜುಲೈ 10-12 ರಂದು ಶಿಮ್ಲಾದಲ್ಲಿ ಸಭೆ ನಡೆಸುವುದಾಗಿ ಈ ಹಿಂದೆ ಘೋಷಿಸಿದ್ದರು.
ಜೂನ್ 23 ರಂದು ನಡೆದಿದ್ದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ವಿಪಕ್ಷ ನಾಯಕರು ಭಾಗವಹಿಸಿದ್ದರು.