ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟಗಳು ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದೆ.
ಸೆ.11 ರ ಬಂದ್ ದಿನದಂದು ಶಾಲಾ ಬಸ್ ಗಳು ಕೂಡ ರಸ್ತೆಗಿಳಿಯಲ್ಲ. ಹೌದು. ಖಾಸಗಿ ಶಾಲಾ ಬಸ್ ಚಾಲಕರು ಕೂಡ ಸಾರಿಗೆ ಒಕ್ಕೂಟದ ಬಂದ್ ಗೆ ಬೆಂಬಲ ನೀಡಿದ್ದು, ಅಂದು ಶಾಲಾ ಬಸ್ ಗಳು ಸಿಗಲ್ಲ, ಈ ಹಿನ್ನೆಲೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಬೇರೆ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು.
ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಉಚಿತ ಬಸ್ ಸೇವೆ ನೀಡುತ್ತಿದ್ದು, ಇದರಿಂದ ಆರ್ಥಿಕವಾಗಿ ಕಂಗೆಟ್ಟಿರುವ ಖಾಸಗಿ ಬಸ್, ಆಟೋ, ಟ್ಯಾಕ್ಸಿ ಚಾಲಕರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಸೆಪ್ಟೆಂಬರ್ 11 ರಂದು ಬೆಂಗಳೂರು ಮಹಾನಗರ ಬಂದ್ ಗೆ ಕರೆ ನೀಡಿದೆ. ಅಂದು ಆಟೋ, ಟ್ಯಾಕ್ಸಿ, ಖಾಸಗಿ ಬಸ್, ಸ್ಕೂಲ್ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ಖಾಸಗಿ ಸಾರಿಗೆ ಒಕ್ಕೂಟ ನಿರ್ಧರಿಸಿದೆ. ಈ ಹಿನ್ನೆಲೆ ಸೆ.11 ರಂದು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಾರಿಗೆ ಒಕ್ಕೂಟಗಳ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ.