![](https://kannadadunia.com/wp-content/uploads/2024/02/Priyank-Kharge.jpg)
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಒಟ್ಟಾರೆ 72 ಸರ್ಕಾರಿ ಸೇವೆಗಳನ್ನು ಒದಗಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆದ ಬದಲಾವಣೆಗಳು ಹಾಗೂ ಕೈಗೊಂಡ ಕ್ರಮಗಳ ಕುರಿತು ವಿಧಾನ ಪರಿಷತ್’ ನಲ್ಲಿ ಮಾತನಾಡಿದ ಸಚಿವರು, ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಾಗಿ 30 ವರ್ಷಗಳ ಸಂಭ್ರಮದಲ್ಲಿ ನಾವಿದ್ದು, ಕಳೆದ 8 ತಿಂಗಳುಗಳಲ್ಲಿ ಹಲವಾರು ಸುಧಾರಣೆಗಳನ್ನು ಮಾಡಲಾಗಿದೆ. ಬಾಪೂಜಿ ಸೇವಾ ಕೇಂದ್ರದಲ್ಲಿ ಈ ಮೊದಲು ಕೇವಲ 20 ರಿಂದ 30 ಸೇವೆಗಳು ಮಾತ್ರ ದೊರೆಯುತ್ತಿದ್ದವು. ಆದರೆ ಇದೀಗ ನಮ್ಮ ಸರ್ಕಾರವು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಒಟ್ಟಾರೆ 72 ಸರ್ಕಾರಿ ಸೇವೆಗಳನ್ನು ಗ್ರಾಮೀಣ ಭಾಗದ ಜನರ ಮನೆ ಬಾಗಿಲಲ್ಲೇ ದೊರೆಯುವಂತೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಪಂಚಾಯತ್ ರಾಜ್ ಇಲಾಖೆಯಲ್ಲಿ ತರಬಹುದಾದಂತಹ ಹಲವು ಬದಲಾವಣೆಗಳ ಕುರಿತು ಈಗಾಗಲೇ ಸಭೆಗಳನ್ನು ನಡೆಸಲಾಗಿದೆ. ಪಂಚಾಯತ್ಗಳನ್ನು ಡಿಜಿಟಲೀಕರಣಗೊಳಿಸಿ ಸುಲಭ ಆಡಳಿತಕ್ಕೆ ಸುವ್ಯವಸ್ಥೆ ಮಾಡಿಕೊಡಲಾಗಿದೆ. ಪಂಚಾಯಿತಿ ಸಿಬ್ಬಂದಿಗಳಿಗೆ ಇ- ಅಟೆಂಡೆನ್ಸ್ ಕಡ್ಡಾಯಗೊಳಿಸಿ ಆಡಳಿತದಲ್ಲಿ ಪಾರದರ್ಶಕತೆ ತರಲಾಗಿದೆ. ಜೊತೆಗೆ ಗ್ರಾಮಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಕಲ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ಆಡಳಿತದಲ್ಲಿ ಉತ್ಸಾಹ ತುಂಬಿ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ ಎಂದರು.
ಪಂಚಾಯತ್ ರಾಜ್ ಇಲಾಖೆಯಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.