ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐ ಆರ್ ದಾಖಲಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಿನ್ನೆ ರಾತ್ರಿ ಮಹಿಳೆ ದೂರು ಕೊಟ್ಟಿದ್ದಾರೆ. ಪರಿಶೀಲಿಸಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಕಾನೂನು ಪ್ರಕಾರ ಈ ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸುವುದಕ್ಕೆ ಆಗುವುದಿಲ್ಲ ಎಂದರು.
ಇದು ಒಬ್ಬ ಮಾಜಿ ಮುಖ್ಯಮಂತ್ರಿಯ ವಿಷಯಕ್ಕೆ ಸಂಬಂಧಿಸಿದ್ದು. ಅಗತ್ಯವಿದ್ದರೆ ಮಹಿಳೆಗೆ ರಕ್ಷಣೆ ಕೊಡುತ್ತೇವೆ. ಯಡಿಯೂರಪ್ಪ ಅವರನ್ನು ವಶಕ್ಕೆ ಸಂಬಂಧಿಸಿದಂತೆ ತನಿಖೆ ಮೇಲೆ ನಿರ್ಧಾರವಾಗಲಿದೆ ಎಂದು ತಿಳಿಸಿದರು.
ಪ್ರಕರಣದ ಬಗ್ಗೆ ಸಿಎಂ, ಡಿಸಿಎಂ ಜೊತೆಗೂ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಹೇಳಿದರು.