ಬೆಂಗಳೂರು : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದರು. ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯವಾಗಿದ್ದು, ಪ್ರತಿಯೊಬ್ಬರಿಗೂ ಸಮಾನತೆ, ಭ್ರಾತೃತ್ವ ಹೊಂದಲು ಪೀಠಿಕೆ ಕಾರಣವಾಗುತದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಫೋಟೋ ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೇಳಿದರು.
ಇನ್ನೂ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಹಲವು ಮಹತ್ವದ ಕಾಯ್ದೆಗಳಿಗೆ ಕೊಕ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಎಪಿಎಂಸಿ ಕಾಯ್ದೆ ರದ್ದತಿಗೂ ತೀರ್ಮಾನಿಸಲಾಗಿದೆ. ಅಲ್ಲದೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಅಧಿನಿಯಮ ರದ್ದುಗೊಳಿಸಲು ಸಂಪುಟ ಸಮ್ಮತಿ ನೀಡಿದೆ ಎಂದು ಹೇಳಿದರು.ಗಂಗಾ ಕಲ್ಯಾಣ ಯೋಜನೆ ಅಕ್ರಮ, ಪಿಎಸ್ ಐ ಹಗರಣ ತನಿಖೆಗೆ ವಿಶೇಷ ತಂಡ ರಚನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.