ಚುನಾವಣೆಗೂ ಮುನ್ನ ಉಚಿತ ಕೊಡುಗೆಗಳನ್ನು ಘೋಷಿಸುವ ಪದ್ಧತಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಖಂಡಿಸಿದೆ. ಉಚಿತ ಪಡಿತರ ಮತ್ತು ಹಣ ಸಿಗುವುದರಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ ಅಭಿಪ್ರಾಯಪಟ್ಟಿದೆ. ನಗರ ಪ್ರದೇಶಗಳಲ್ಲಿ ನಿರಾಶ್ರಿತರ ಆಶ್ರಯದ ಹಕ್ಕಿಗೆ ಸಂಬಂಧಿಸಿದ ವಿಷಯದ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
“ನಾವು ನಿಮ್ಮ ಕಾಳಜಿಯನ್ನು ಮೆಚ್ಚುತ್ತೇವೆ, ಆದರೆ ಅವರನ್ನು ಸಮಾಜದ ಮುಖ್ಯವಾಹಿನಿಯ ಭಾಗವಾಗಿಸಿ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ನೀಡುವುದು ಉತ್ತಮವಲ್ಲವೇ” ಎಂದು ಪೀಠ ಪ್ರಶ್ನಿಸಿದೆ. ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು, ನಗರ ನಿರಾಶ್ರಿತರಿಗೆ ಆಶ್ರಯ ಒದಗಿಸುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ನಗರ ಬಡತನ ನಿವಾರಣಾ ಮಿಷನ್ ಅನ್ನು ಕೇಂದ್ರವು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ಪೀಠಕ್ಕೆ ತಿಳಿಸಿದರು.
“ದುರದೃಷ್ಟವಶಾತ್, ಈ ಉಚಿತ ಕೊಡುಗೆಗಳಿಂದಾಗಿ ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಯಾವುದೇ ಕೆಲಸ ಮಾಡದೆ ಹಣವನ್ನು ಸಹ ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಅಭಿಪ್ರಾಯಪಟ್ಟರು.
ನಗರ ಬಡತನ ನಿವಾರಣಾ ಮಿಷನ್ ಅನ್ನು ಎಷ್ಟು ಸಮಯದೊಳಗೆ ಜಾರಿಗೆ ತರಲಾಗುವುದು ಎಂದು ಕೇಂದ್ರದಿಂದ ಪರಿಶೀಲಿಸುವಂತೆ ಪೀಠವು ಅಟಾರ್ನಿ ಜನರಲ್ ಅವರನ್ನು ಕೇಳಿದೆ. ಸುಪ್ರೀಂ ಕೋರ್ಟ್ ಆರು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ.