alex Certify ಹಜ್ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: 2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಜ್ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: 2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಅವರು ನಗರದ ಹಜ್ ಭವನದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.

ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿ ಸಚಿವರು ಮಾತನಾಡಿ, ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಯಾತ್ರೆ ಹಜ್. ಕರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಇದು ಸ್ಥಗಿತಗೊಂಡಿತ್ತು. ವಿಶ್ವದಾದ್ಯಂತ ಕರೊನಾ ಲಸಿಕೆ ಕಾರ್ಯ ಚುರುಕುಗೊಂಡಿದ್ದು, ಕರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹಜ್ ಯಾತ್ರೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆಗೆ ಚಾಲನೆ: ಈ ಬಾರಿ ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 1 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದೆ.  ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್ ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನವರಿ 31, 2022 ರ ವರೆಗೆ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಲಾಟರಿ ನಡೆಸಿ, ಜುಲೈ 2022 ರಲ್ಲಿ ಹಜ್ ಯಾತ್ರೆಯನ್ನು ಅಯೋಜಿಸಲಾಗುವುದು ಎಂದು ತಿಳಿಸಿದರು.

ಯಾತ್ರೆಯಲ್ಲಿ ತೊಂದರೆ ಆಗದಂತೆ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ:

ಮುಸ್ಲಿಂ ಸಮುದಾಯದವರು ಶ್ರದ್ಧೆ ಮತ್ತು ಭಕ್ತಿಯಿಂದ ಕೈಗೊಳ್ಳುವ ಈ ಯಾತ್ರೆಯಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿಮಾನದ ವ್ಯವಸ್ಥೆ, ಅಲ್ಲಿ ತಂಗುವ ಹಾಗೂ ಇನ್ನಿತರ ವ್ಯವಸ್ಥೆಗಳಲ್ಲಿ ಲೋಪವಿರದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ರಿಪೇರಿ, ಹೆಚ್ಚಿನ ಅನುದಾನ ದೊರಕಿಸಿಕೊಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇಂದು ಬೆಳಿಗ್ಗೆ ಕೇಂದ್ರ ಹಜ್ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಹಲವಾರು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯು ಚರ್ಚೆ ನಡೆಯಿತು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಹಜ್ ಭವನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ರೌಫುದ್ದೀನ್ ಕಛೇರಿವಾಲೈ, ರಾಜ್ಯಸಭಾ ಸದಸ್ಯ ಹಾಗೂ ಹಜ್ ಸಮಿತಿ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಶಾಸಕಿ ಹಾಗೂ ಸಮಿತಿ ಸದಸ್ಯೆ ಖಾನಿಜ್ ಫಾತಿಮಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...